ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ನಲ್ಲಿ ನವೀನ್ ಸಾವಿಗೆ ಕೇಂದ್ರದ ನಿರ್ಲಕ್ಷ್ಯ ಕಾರಣ: ಸಿದ್ದರಾಮಯ್ಯ ಟೀಕೆ

Last Updated 2 ಮಾರ್ಚ್ 2022, 12:34 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿಯೇ ಉಕ್ರೇನ್‌ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡರು ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಯುದ್ಧಗ್ರಸ್ತ ಉಕ್ರೇನ್‌ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ’ ಎಂದು ಹರಿಹಾಯ್ದಿದ್ದಾರೆ.

‘ಕಳೆದ ಕೆಲವು ತಿಂಗಳಿಂದ ಉಕ್ರೇನ್-ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಹಲವಾರು ದೇಶಗಳು ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ’ ಎಂದು ಮಾಜಿ ಸಿಎಂ ಟ್ವೀಟಿಸಿದ್ದಾರೆ.

‘ತನ್ನನ್ನು ವಿಶ್ವಗುರು ಎಂದು ಕೊಂಡಾಡುತ್ತಾ, ಭಕ್ತರು ನಡೆಸುತ್ತಿರುವ ಬೋಪರಾಕ್ ಭಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ತಲೆ ತೂಗುತ್ತಾ ಕಾಲಹರಣ ಮಾಡಿದರೇ ವಿನಹ ಯುದ್ಧಗ್ರಸ್ತ ಉಕ್ರೇನ್‌ನಲ್ಲಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನನೀಡಲೇ ಇಲ್ಲ’ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ

‘ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು, ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ’ ಎಂದು ಅವರು ಟೀಕಿಸಿದ್ದಾರೆ.

‘ಪ್ರಧಾನಿ ಮೋದಿ ಅವರು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ, ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು’ ಎಂದು ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

‘ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ನಮ್ಮ ಈ ಕರ್ತವ್ಯ ಪ್ರಜ್ಞೆಯಿಂದಾಗಿ ಕೇಂದ್ರ ಸರ್ಕಾರದ ವೈಫಲ್ಯಗಳ ಪಟ್ಟಿಯನ್ನು ಪೂರ್ಣವಾಗಿ ನೀಡಲು ನಾನು ಬಯಸುವುದಿಲ್ಲ. ಉಕ್ರೇನ್ ಮತ್ತು ರಷ್ಯಾ ನಡುವಿನ ಈಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಲೇ ಬೇಕಾಗುತ್ತದೆ’ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

‘ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್ ಮತ್ತು ರಷ್ಯಾ ದೇಶಗಳೆರಡರ ವೈಷಮ್ಯದ ನಡುವೆ ಸಿಕ್ಕಿಹಾಕಿಕೊಂಡು ಸಾವು-ಬದುಕಿನ ಹೋರಾಟ ನಡೆಸುತ್ತಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಉಕ್ರೇನ್‌ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು’ ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.

‘ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ಮೋದಿ ಸರ್ಕಾರದಂತೆ ಪ್ರಚಾರ ಮಾಡಿ, ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ’ ಎಂದು ಅವರು ಹೇಳಿದ್ದಾರೆ.

‘ಮೋದಿ ಅವರ ಕೇಂದ್ರ ಸರ್ಕಾರ ಉಕ್ರೇನ್‌ನಿಂದ ಭಾರತೀಯರನ್ನು ಕರೆತರುವ ಕಾರ್ಯಾಚರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ’ ಎಂದು ಕಾಂಗ್ರೆಸ್‌ ನಾಯಕ ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಉಕ್ರೇನ್‌ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಕೇಂದ್ರ ಸರ್ಕಾರ ಉಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ವಿದೇಶದಲ್ಲಿ ವೈದ್ಯಕೀಯ ಪದವಿ‌ ಪಡೆದು ಬರುವವರು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯ ಇರುವ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ ಎಂಬ ಸಚಿವ ಪ್ರಲ್ಹಾದ ಜೋಶಿಯವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದೆ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಕೇಂದ್ರದ ಮೋದಿ ಸರ್ಕಾರ ಏಕರೂಪದ ಪರೀಕ್ಷೆಯ ನೆಪದಲ್ಲಿ ನೀಟ್ ಪರೀಕ್ಷೆಯನ್ನು ಗೊಂದಲಮಯವಾಗಿ ಮಾಡಿರುವ ಕಾರಣದಿಂದ ಆಗಿರುವ ಅನಾಹುತಗಳ‌ ಬಗ್ಗೆ ‌ ಚರ್ಚಿಸಲು ಇದು ಸರಿಯಾದ ಕಾಲ‌ ಅಲ್ಲ’ ಎಂದು ಅವರು ಹೇಳಿದ್ದಾರೆ.

‘ಸಚಿವ ಪ್ರಲ್ಹಾದ ಜೋಶಿ, ಇಂತಹ ಉಡಾಫೆ ಹೇಳಿಕೆಗಳಿಂದ ಕಾಲಹರಣ ಮಾಡುವ ಬದಲಿಗೆ ಉಕ್ರೇನ್‌ನಲ್ಲಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಸುರಕ್ಷತೆ ಕಡೆ ಗಮನ ಹರಿಸಲಿ’ ಎಂದೂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT