ಶಾಸಕರ ಸಂಬಳ ಹೆಚ್ಚಳಕ್ಕೆ ರಾಜ್ಯಪಾಲರ ಅಸ್ತು

ಬೆಂಗಳೂರು: ಸಭಾಧ್ಯಕ್ಷರು, ಉಪ ಸಭಾಧ್ಯಕ್ಷರು, ಸಭಾಪತಿ, ಉಪ ಸಭಾಪತಿ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ ಸಚೇತಕರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರ ವೇತನ ಮತ್ತು ಭತ್ಯೆ ಹೆಚ್ಚಳಕ್ಕೆ ಅವಕಾಶ ಕಲ್ಪಿಸುವ ‘ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಕಾಯ್ದೆ’ ತಿದ್ದುಪಡಿ ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಂಕಿತ ಹಾಕಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ, ಕಾಂಗ್ರೆಸ್ ಗದ್ದಲದ ಮಧ್ಯೆ ಯಾವುದೇ ಚರ್ಚೆ ನಡೆಯದೆ ಎರಡೂ ಸದನಗಳಲ್ಲಿ ಈ ಮಸೂದೆ ಅಂಗೀಕಾರಗೊಂಡಿತ್ತು.
‘2015ರಿಂದ ಶಾಸಕರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಆಗಿರಲಿಲ್ಲ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಸಾಕಷ್ಟು ಶಾಸಕರು ಸಂಕಷ್ಟ ಅನುಭವಿಸಿದ್ದಾರೆ. ಆದ್ದರಿಂದ, ವೇತನ ಹೆಚ್ಚಿಸಲು ಅನುವಾಗುವಂತೆ ಕಾಯ್ದೆ ತಿದ್ದುಪಡಿಗೆ ಉದ್ದೇಶಿಸಲಾಗಿದೆ’ ಎಂದು ಮಸೂದೆ ಮಂಡಿಸಿದ್ದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಸಮರ್ಥನೆ ನೀಡಿದ್ದರು.
ಬೆಲೆ ಸೂಚ್ಯಂಕದ ಆಧಾರದಲ್ಲಿ 2023 ಏಪ್ರಿಲ್ 1ರಿಂದ ಪ್ರತಿ 5 ವರ್ಷ ಕ್ಕೊಮ್ಮೆ ಸಂಬಳ ಹೆಚ್ಚಿಸುವ ಬಗ್ಗೆಯೂ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ವಿಧಾನಮಂಡಳದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ಪರಿಷ್ಕರಣೆಯಿಂದ ವಾರ್ಷಿಕ ₹ 67 ಕೋಟಿ ಹೆಚ್ಚುವರಿ ವೆಚ್ಚ ಉಂಟಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.