ಬೆಳಗಾವಿ: ಎಡಿಜಿಪಿ ಅಮರ್ಕುಮಾರ್ ಪಾಂಡೆ ಅವರು ಶುಕ್ರವಾರ ಪೀರನವಾಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿ ಉಂಟಾಗಿರುವ ರಾಯಣ್ಣ ಪ್ರತಿಮೆ ವಿವಾದದ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಕಾನೂನು–ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇಲ್ಲಿ ಕನ್ನಡ–ಮರಾಠಿ ಭಾಷಿಕರು ಎಂದೇನಿಲ್ಲ. ಯಾರೇ ತಪ್ಪು ಮಾಡಿದ್ದಾರೊ ಅವರ ವಿರುದ್ಧ ಕ್ರಮವಾಗುತ್ತದೆ. ಪೀರನವಾಡಿಯಲ್ಲಿ ಗುರುವಾರ ಹಾಗೂ ಶುಕ್ರವಾರ ರಾಯಣ್ಣ ಪ್ರತಿಮೆ ಸಂಬಂಧ ಕೆಲವು ಬೆಳವಣಿಗೆಗಳಾಗಿವೆ. ಶುಕ್ರವಾರ ಬೆಳಿಗ್ಗೆ ಕಾನೂನು ಮತ್ತು ಸುವ್ಯವಸ್ಥೆಗೆ ಸ್ವಲ್ಪ ತೊಂದರೆ ಆಗಿತ್ತು. ನಗರ ಪೊಲೀಸರು ಭೇಟಿ ನೀಡಿ ಸರಿಪಡಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ತಿಳಿಸಿದರು.
‘ಕಾನೂನು ಸುವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲು ಬಂದಿದ್ದೇನೆ. ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮ ಆಗುತ್ತದೆ. ವಿವಾದ ಶಾಂತಿಯುತವಾಗಿ ಬಗೆಹರಿಯುತ್ತದೆ. ಜಿಲ್ಲಾಧಿಕಾರಿ ಎಲ್ಲ ಮುಖಂಡರ ಸಭೆ ನಡೆಸಲಿದ್ದಾರೆ’ ಎಂದು ತಿಳಿಸಿದರು.
‘ಪ್ರತಿಮೆ ಸ್ಥಾಪನೆ ವೇಳೆ ಪೊಲೀಸರು ಸ್ಥಳದಲ್ಲೇ ಇದ್ದರು. ಆದರೂ ಘಟನೆ ಹೇಗಾಗಿದೆ ಎಂಬ ಬಗ್ಗೆ ತಿಳಿದುಕೊಳ್ಳುತ್ತೇನೆ. ಪೊಲೀಸರ ವೈಫಲ್ಯದ ಆರೋಪದ ಬಗ್ಗೆಯೂ ಮಾಹಿತಿ ಪಡೆಯುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.