ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಡಿನೋಟಿಫೈ | ಬಿಎಸ್‌ವೈ, ನಿರಾಣಿ ನಿರಾಳ: ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ

ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಡಿನೋಟಿಫೈ ಮಾಡಿದ ಪ್ರಕರಣ: ತಡೆ ನೀಡಿದ ನ್ಯಾಯಾಲಯ
Last Updated 27 ಜನವರಿ 2021, 20:03 IST
ಅಕ್ಷರ ಗಾತ್ರ

ನವದೆಹಲಿ:ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಡಿನೋಟಿಫೈ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್‌ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ.

ಆದರೆ, ಯಡಿಯೂರಪ್ಪ ಅವರ ವಿರುದ್ಧದ ಕ್ರಿಮಿನಲ್‌ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ ಜನವರಿ 5ರಂದು ನೀಡಿರುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

2010–11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಸೃಷ್ಟಿಸಿ ಆ ಭೂಮಿಯನ್ನು ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವರಾಗಿದ್ದ ಮುರುಗೇಶ್‌ ನಿರಾಣಿ ತಮ್ಮಿಂದ ಹಿಂದಕ್ಕೆ ಪಡೆದಿದ್ದಾಗಿ ಉದ್ಯಮಿ ಎ.ಅಲಂ ಪಾಷಾ ಆರೋಪಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ನಿರಾಣಿ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ಪೀಠವು ಪಾಷಾ ಅವರಿಗೆ ನೋಟಿಸ್‌ ಜಾರಿಗೊಳಿಸಿದೆ.

ಹಿರಿಯ ವಕೀಲರಾದ ಮುಕುಲ್‌ ರೋಹಟಗಿ, ಕೆ.ವಿ. ವಿಶ್ವನಾಥನ್‌ ಮತ್ತು ಸಜ್ಜನ್‌ ಪೂವಯ್ಯ ಅರ್ಜಿದಾರರ ಪರ ವಾದ ಮಂಡಿಸಿದರು.

‘ನಮ್ಮ ಅರ್ಜಿದಾರರು ಆಗ ಮುಖ್ಯಮಂತ್ರಿಯಾಗಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ಈ ಹಿಂದೆ ಸಲ್ಲಿಸಿದ್ದ ದೂರನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಇದೇ ದೂರಿನ ಮೇಲೆಯೇ ನ್ಯಾಯಾಲಯದಲ್ಲಿಮತ್ತೆ ವಿಚಾರಣೆ ಮುಂದುವರಿಸಲು ಅವಕಾಶ ಇಲ್ಲ. ಹೀಗಾಗಿ, ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವ ಪ್ರಕ್ರಿಯೆಗೆ ತಡೆ ನೀಡಬೇಕು’ ಎಂದು ವಕೀಲರಾದ ರೋಹಟಗಿ ಕೋರಿದರು.

ಈ ಬಗ್ಗೆ ತಡೆ ನೀಡಿದ ಪೀಠವು, ‘ನಿಮ್ಮ ಅರ್ಜಿದಾರರು ಮುಖ್ಯಮಂತ್ರಿ. ಮುಖ್ಯಮಂತ್ರಿ ವಿರುದ್ಧ ಯಾರು ವಾರಂಟ್‌ ಹೊರಡಿಸುತ್ತಾರೆ. ಮನವಿ ಪತ್ರವನ್ನು ಹೊರಡಿಸಬಹುದೇ ಹೊರತು ವಾರಂಟ್‌ ಅಲ್ಲ’ ಎಂದು ಯಡಿಯೂರಪ್ಪ ಪರ ವಕೀಲರಿಗೆ ತಿಳಿಸಿದೆ. ಇದೇ ರೀತಿಯ ಆದೇಶವನ್ನು ನಿರಾಣಿ ಅವರ ಅರ್ಜಿಗೂ ನೀಡಲಾಯಿತು.

ಯಡಿಯೂರಪ್ಪ ಮತ್ತು ನಿರಾಣಿ ವಿರುದ್ಧ ಕ್ರಿಮಿನಲ್‌ ವಿಚಾರಣೆಗೆ ಅವಕಾಶ ನೀಡಿರುವುದನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನವರಿ 5ರಂದು ವಜಾಗೊಳಿಸಿದ್ದ ಹೈಕೋರ್ಟ್‌, ವಿಚಾರಣೆ ನಡೆಸು ವಂತೆಯೂ ಆದೇಶಿಸಿತ್ತು. ಈ ಆದೇಶ ವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಿರಾಣಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT