ಬೆಂಗಳೂರು: ಶಾಲಾ ಶುಲ್ಕದ ವಿಷಯದಲ್ಲಿ ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ(ಕೆಎಎಂಎಸ್) ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಲು ಆದೇಶಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಮತ್ತು ಆಯುಕ್ತ ಅನ್ಬುಕುಮಾರ್ ಅವರಿಗೆ ನೋಟಿಸ್ ನೀಡಲು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ತಿಳಿಸಿದೆ.
‘ಆಡಳಿತ ಮಂಡಳಿಗಳ ಮನವಿ ಪರಿಗಣಿಸುವಂತೆ ಹೈಕೋರ್ಟ್ ಮೌಖಿಕ ಆದೇಶ ನೀಡಿದೆ. ಈ ಆದೇಶವನ್ನು ಅಧಿಕಾರಿಗಳು ಧಿಕ್ಕರಿಸಿದ್ದಾರೆ. 2020–21ನೇ ಸಾಲಿನ ಶುಲ್ಕವನ್ನು ಹೆಚ್ಚಿಸಿದರೆ ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ. ಆ ಮೂಲಕ ಶಾಲಾ ಆಡಳಿತ ಮಂಡಳಿಗಳ ಸಾಂವಿಧಾನಿಕ ಹಕ್ಕು ಕಸಿದುಕೊಳ್ಳಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
‘ಖಾಸಗಿ ಶಾಲೆಗಳಲ್ಲಿ 55 ಸಾವಿರಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದಾರೆ. 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶುಲ್ಕ ಹೆಚ್ಚಳ ಮಾಡದಿದ್ದರೆ ಶಾಲೆಗಳನ್ನು ನಡೆಸುವುದು ಕಷ್ಟವಾಗಲಿದೆ’ ಎಂದು ಹೇಳಿದ್ದಾರೆ. ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಪೀಠ ಮುಂದೂಡಿತು.