₹ 26 ಸಾವಿರ ಕೋಟಿ ಅನುದಾನ ಬಳಕೆಗೆ ಒಪ್ಪಿಗೆ

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ಪಿ) ಅಡಿಯಲ್ಲಿ ಪ್ರಸಕ್ತ ವರ್ಷ ₹ 26,005 ಕೋಟಿ ವೆಚ್ಚ ಮಾಡುವ ಪ್ರಸ್ತಾವಗಳುಳ್ಳ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಅಭಿವೃದ್ಧಿ ಪರಿಷತ್ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಪ್ರಸಕ್ತ ವರ್ಷ ಎಸ್ಸಿಎಸ್ಪಿ ಅಡಿಯಲ್ಲಿ ₹ 18,331.54 ಕೋಟಿ ಮತ್ತು ಟಿಎಸ್ಪಿ ಅಡಿಯಲ್ಲಿ ₹ 7,673.47 ಕೋಟಿ ವೆಚ್ಚ ಮಾಡುವ ಪ್ರಸ್ತಾವಗಳುಳ್ಳ ಕ್ರಿಯಾಯೋಜನೆಗೆ ಅನುಮೋದನೆ ನೀಡಿಡಲಾಗಿದೆ’ ಎಂದರು.
ಎರಡೂ ಉಪ ಯೋಜನೆಗಳ ಅಡಿ ಮುಂದುವರಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮೊದಲ ಕಂತಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಕಾರ್ಯಕ್ರಮಗಳ ಅನುಷ್ಠಾನವನ್ನು ತ್ವರಿತವಾಗಿ ಆರಂಭಿಸಲಾಗುವುದು ಎಂದು ಹೇಳಿದರು.
ಪೂರ್ಣ ಅನುದಾನ ಬಳಕೆ: ‘ಕಳೆದ ಆರ್ಥಿಕ ವರ್ಷದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ಯಾವುದೇ ಅನುದಾನವನ್ನು ಬಾಕಿ ಉಳಿಸಿಕೊಂಡಿಲ್ಲ ಅಥವಾ ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿಲ್ಲ’ ಎಂದು ಯಡಿಯೂರಪ್ಪ ತಿಳಿಸಿದರು.
ಶೇ 95ರಷ್ಟು ಸಾಧನೆ: ಗೋವಿಂದ ಕಾರಜೋಳ ಮಾತನಾಡಿ, ‘ಕಳೆದ ವರ್ಷ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿಯಲ್ಲಿ ₹ 25,945.90 ಕೋಟಿ ಅನುದಾನ ಮೀಸಲಿಡಲಾಗಿತ್ತು. ₹ 24,646.99 ಕೋಟಿ ವೆಚ್ಚ ಮಾಡಲಾಗಿದೆ. ಯಾವುದೇ ಅನುದಾನದ ವರ್ಗಾವಣೆ ಅಥವಾ ಉಳಿಕೆ ಆಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.