ರಾಜರಾಜೇಶ್ವರಿನಗರ: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ ರಾಜರಾಜೇಶ್ವರಿ ವಿದ್ಯಾ ಶಾಲಾ ಆವರಣದಲ್ಲಿ ಫೆಬ್ರುವರಿ 21ರಂದು ನಡೆಯಲಿದೆ ಎಂದು ಕಸಾಪ ರಾಜರಾಜೇಶ್ವರಿನಗರ ಕ್ಷೇತ್ರ ಘಟಕದ ಅಧ್ಯಕ್ಷ ನಾಗೇಂದ್ರ ಕುಮಾರ್ ಕೆ.ಎನ್. ತಿಳಿಸಿದರು.
ಬೆಳಿಗ್ಗೆ 8.30ಕ್ಕೆ ಶಾಸಕ ಮುನಿರತ್ನ ರಾಷ್ಟ್ರಧ್ವಜ, ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ನಾಡಧ್ವಜ, ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು.
ಸಮ್ಮೇಳನಾಧ್ಯಕ್ಷರನ್ನಾಗಿ ಪ್ರೊ.ನಾರಾಯಣ ಘಟ್ಟ(ನಾಹೋ) ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 10.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಚಾಲನೆ ನೀಡುವರು. ವಿಮರ್ಶಕ ಡಾ.ಬೈಲಮಂಗಲ ರಾಮೇಗೌಡ ಪುಸ್ತಕ ಮಳಿಗೆ ಉದ್ಘಾಟಿಸುವರು. ಸಮ್ಮೇಳನವನ್ನು ಕವಿ ದೊಡ್ಡರಂಗೇಗೌಡ ಉದ್ಘಾಟಿಸಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಕರಿಗೌಡ ಬೀಚನಹಳ್ಳಿ ಧ್ವಜ ಹಸ್ತಾಂತರ ಮಾಡುವರು.
ಕವಿಗೋಷ್ಠಿಯಲ್ಲಿ ಪ್ರೊ.ಎಲ್.ಎನ್.ಮುಕುಂದರಾಜ್ ಅಧ್ಯಕ್ಷತೆ ವಹಿಸುವರು. ಲಲಿತಾ ಹೊಸಪ್ಯಾಟಿ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಠಿ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಬಿಜೆಪಿ ಮುಖಂಡ ಡಿ.ಎಸ್.ವೀರಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಡಾ.ಸಿದ್ದಲಿಂಗಯ್ಯ ಸಮಾರೋಪ ಭಾಷಣ ಮಾಡುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.