ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಜೈಲಿಗೆ ಕಳಿಸಿದ್ದರಲ್ಲಿ ಜೋಶಿ ಶಾಮೀಲಾಗಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ

ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ ಬಿ.ಎಸ್‌ ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರ? ನೀವು ಅದರಲ್ಲಿ ಶಾಮೀಲಾಗಿಲ್ಲವೇ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನ ನಾಯಕರು ಹಮ್ಮಿಕೊಂಡಿರುವ ಸಿದ್ದರಾಮೋತ್ಸವದ ಬಗ್ಗೆ ವ್ಯಂಗ್ಯವಾಡಿದ್ದ ಪ್ರಲ್ಹಾದ್‌ ಜೋಶಿ ಅವರ ವಿರುದ್ಧ ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಆರೋಪಗಳ ಸುರಿಮಳೆಗೈದಿದ್ದಾರೆ.

‘ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರೇ, ನಾಲ್ಕು ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದವರು ಯಾರು? ಪಕ್ಷ ಅಧಿಕಾರದಲ್ಲಿದ್ದಾಗಲೇ ಅವರನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರ? ನೀವೂ ಅದರಲ್ಲಿ ಶಾಮೀಲಾಗಿಲ್ಲವೇ? ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನದ ಆಸೆ ತೋರಿಸಿ, ಅವರಿಂದಲೇ ಆಪರೇಷನ್ ಕಮಲ ಮಾಡಿಸಿದ್ದು ಯಾರು? ಕೊನೆಗೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದು ಯಾರು? ಕೈಗೆ ಬಂದದ್ದು ಬಾಯಿಗೆ ಬಾರದೆ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ ಪ್ರಲ್ಹಾದ್ ಜೋಶಿ?’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

‘ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿದಿನ ಯಡಿಯೂರಪ್ಪ ಮತ್ತು ವಿಜಯೇಂದ್ರರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿರುವುದು ಯಾರ ಕುಮ್ಮಕ್ಕಿನಿಂದ? ಪಕ್ಷದ ಹಿರಿಯ ನಾಯಕನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕರ ವಿರುದ್ದ ಕ್ರಮಕೈಗೊಳ್ಳದಂತೆ ತಡೆಯುತ್ತಿರುವ ಕೈಗಳು ಯಾರದ್ದು? ಯಡಿಯೂರಪ್ಪ ಅವರ ಮಗ ವಿಜಯೇಂದ್ರಗೆ ಸಚಿವ ಸ್ಥಾನ ಸಿಗದಂತೆ ಮಾಡಲು ಪಂಚೆ ಎತ್ತಿಕಟ್ಟಿ ನಿಂತು ಸಂತೋಷ ಪಡುತ್ತಿರುವವರು ಯಾರು? ಆ ಸಂತೋಷದಲ್ಲಿ ಭಾಗಿಯಾಗಿರುವವರು ಯಾರು? ಹಗರಣಗಳಲ್ಲಿ ಅವರ ಹೆಸರನ್ನು ಸೋರಿಬಿಡುತ್ತಿರುವ ಸಂಚು ಯಾರದ್ದು?’ ಎಂದು ಅವರು ಪ್ರಶ್ನೆ ಹಾಕಿದ್ದಾರೆ.

‘ಲಿಂಗಾಯತರನ್ನು, ಲಿಂಗಾಯತ ಮಠದ ಸ್ವಾಮಿಗಳನ್ನು ಓಲೈಸುತ್ತಾ ಪಕ್ಷ ಕಟ್ಟಿ ಈಗ ಪಕ್ಷದಲ್ಲಿರುವ ಒಬ್ಬೊಬ್ಬ ಲಿಂಗಾಯತರನ್ನು ಮೂಲೆ ಗುಂಪು ಮಾಡುತ್ತಿರುವುದು ಯಾರ ಕಾರಸ್ತಾನ? ಮುಖ್ಯಮಂತ್ರಿ ಸ್ಥಾನದ ಕನಸಿನಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಶಾಸಕ ಅರವಿಂದ ಬೆಲ್ಲದ ಅವರ ಆಸೆಗೆ ತಣ್ಣೀರೆರಚಿದ್ದು ಯಾರು? ಮೊದಲ ಅಧಿಕಾರಾವಧಿಯಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಮಾಡಿದ್ದ ಬಿಜೆಪಿ, 2ನೇ ಅವಧಿಯ ವರ್ಷ ಮುಗಿಯುವಷ್ಟರಲ್ಲಿ ಮೊದಲನೆಯವರನ್ನು ಪದಚ್ಯುತಿಗೊಳಿಸಿ, 2ನೇ ಮುಖ್ಯಮಂತ್ರಿಯನ್ನು ಮಾಡಿತ್ತು. ಈಗ ಎರಡನೆಯವರನ್ನೂ ಇಳಿಸಿ ಮೂರನೆಯವರನ್ನು ಕೂರಿಸಲು ಹೊರಟಿರುವ ನೀವು ಕಾಂಗ್ರೆಸ್ ಭಿನ್ನಮತದ ಬಗ್ಗೆ ಮಾತನಾಡುವುದು ತಮಾಷೆಯಾಗಿದೆ ಪ್ರಲ್ಹಾದ್‌ ಜೋಶಿ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

‘ಸಾಧನೆಯ ಬಲದಿಂದ ಬಹುಮತ ಗಳಿಸಿ ಅಧಿಕಾರಕ್ಕೆ ಬರುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ನಿಮ್ಮದೇನಿದ್ದರೂ ಆಪರೇಷನ್ ಕಮಲದ ಹೊಲಸು ದಂಧೆ. ಎದುರಿಗಿದ್ದವರ ಊಟದೆಲೆಯ ಮೇಲಿನ ಸತ್ತ ನೊಣವನ್ನು ಹುಡುಕುವ ಚಾಳಿ ಬಿಡಿ. ನಿಮ್ಮ ಊಟದ ಎಲೆಯಲ್ಲಿ ಸತ್ತು ಬಿದ್ದಿರುವ ಆನೆಯನ್ನು ನೋಡಿ ಪ್ರಲ್ಹಾದ್‌ ಜೋಶಿ’ ಎಂದು ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT