ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹಸಚಿವರಿಂದ ನೈತಿಕ ಸ್ಥೈರ್ಯ ಕಳೆದುಕೊಂಡ ಪೊಲೀಸ್ ಇಲಾಖೆ: ಸಿದ್ದರಾಮಯ್ಯ ವಾಗ್ದಾಳಿ

ಅಕ್ಷರ ಗಾತ್ರ

ಬೆಂಗಳೂರು: ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಬಾಗಲಕೋಟೆಯ ಕೆರೂರ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಯಲ್ಲಿ ಗಾಯಗೊಂಡವರು ಮತ್ತು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದೆ. ಘಟನೆಯ ಸುದ್ದಿ ಗೊತ್ತಾದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠರ ಜೊತೆ ಮಾತನಾಡಿ ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದೆ’ ಎಂದು ಹೇಳಿದ್ದಾರೆ.

‘ಉದ್ರಿಕ್ತ ಸ್ಥಿತಿಯಲ್ಲಿ ಭೇಟಿ ನೀಡುವುದು ಸೂಕ್ತ ಅಲ್ಲವೆಂದು ತಿಳಿದು ಕೆಲವು ದಿನಗಳ ನಂತರ ಇಂದು ಬಂದು ಎರಡೂ ಗುಂಪಿನವರನ್ನು ಭೇಟಿ ಮಾಡಿದೆ. ಇಂತಹ ಘಟನೆಗಳಲ್ಲಿ ಅನವಶ್ಯಕವಾಗಿ ಪ್ರಚೋದನೆ ನೀಡಿ ಶಾಂತಿ-ಸೌಹಾರ್ದತೆ ಕೆಡಿಸುವ ಕೆಲಸವನ್ನು ಯಾರೂ ಮಾಡಬಾರದು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿನ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟುಹೋಗುತ್ತಿದ್ದು ಅನ್ಯಾಯ-ದೌರ್ಜನ್ಯಗಳಿಗೆ ಬಲಿಯಾಗಿರುವ ಜನರು ಪೊಲೀಸರ ನಿಷ್ಕ್ರೀಯತೆಯಿಂದಾಗಿ ಹತಾಶರಾಗಿದ್ದಾರೆ. ಅಸಮರ್ಥ ಗೃಹಸಚಿವರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಪೊಲೀಸ್ ಇಲಾಖೆ ನೈತಿಕ ಸ್ಥೈರ್ಯವನ್ನು ಕಳೆದುಕೊಂಡಿದೆ’ ಎಂದು ಟೀಕಿಸಿದ್ದಾರೆ.

‘ಗಲಭೆಯಲ್ಲಿ ಗಾಯಗೊಂಡವರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ರೂಪದಲ್ಲಿ ಒಂದಷ್ಟು ಹಣ ನೀಡಿದ್ದೆ. ಹಣ ಬೇಡ, ನ್ಯಾಯ ಕೊಡಿ ಎಂದು ನೊಂದ ಕುಟುಂಬದವರು ಕೇಳಿದ್ದಾರೆ. ಅವರ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವುದು ರಾಜ್ಯ ಬಿಜೆಪಿ ಸರ್ಕಾರದ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT