ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದೇಶವಿಲ್ಲದೇ ಪಠ್ಯ ಪರಿಷ್ಕರಣೆ| ಸಚಿವ ನಾಗೇಶ್‌ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

Last Updated 10 ಜೂನ್ 2022, 6:27 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ಅಧಿಕೃತ ಆದೇಶ ಇಲ್ಲದೇ ಪಠ್ಯ ಪುಸ್ತಕ ಪರಿಷ್ಕರಣೆ ನಡೆದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

‘ಪಠ್ಯಪುಸ್ತಕಗಳನ್ನು ಪರಿಷ್ಕೃತಗೊಳಿಸಿರುವುದಕ್ಕೆ ಘಟನೋತ್ತರ ಅನುಮತಿ ನೀಡಿ, ಮುದ್ರಿಸಲು ಸೂಚಿಸಲಾಗಿದೆ’ ಎಂಬ ಸರ್ಕಾರದ ಆದೇಶದ ಕುರಿತು ಪ್ರಜಾವಾಣಿ ಶುಕ್ರವಾರದ ಸಂಚಿಕೆಯ ಮುಖಪುಟದಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ‘ಆದೇಶ ಇಲ್ಲದೇ ಪಠ್ಯ ಪರಿಷ್ಕರಣೆ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಕಟವಾದ ಈ ವರದಿಯನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಸ್ಪಷ್ಟವಾದ ಸರ್ಕಾರಿ ಆದೇಶವಿಲ್ಲದೆ ಪಠ್ಯಪುಸ್ತಕಗಳ ಪರಿಷ್ಕರಿಸಲು ಒಬ್ಬ ಕಿಡಿಗೇಡಿ ಟ್ರೋಲರ್‌ಗೆ ಅವಕಾಶ ನೀಡಿ, ಈಗ ಆತ ಮಾಡಿಟ್ಟಿರುವ ಕೊಳಕುಗಳನ್ನೆಲ್ಲ ತಲೆಮೇಲೆ ಇಟ್ಟುಕೊಂಡು ಸಮರ್ಥಿಸುತ್ತಿರುವ ಬೇಜವಾಬ್ದಾರಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ವಜಾಮಾಡಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ರಾಜ್ಯದ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಕ್ಷೇತ್ರವನ್ನೇ ಅಲ್ಲೋಲಕಲ್ಲೋಲ ಮಾಡಿರುವ ಇಂತಹ ಬೇಜವಾಬ್ದಾರಿ ಶಿಕ್ಷಣ ಸಚಿವರನ್ನು ಮುಖ್ಯಮಂತ್ರಿಗಳು ಇನ್ನೂ ಸಮರ್ಥಿಸಿಕೊಳ್ಳಲು ಹೊರಡುವುದಾದರೆ ಅವರೇ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪಠ್ಯಪುಸ್ತಕ ಪರಿಷ್ಕರಣೆಯಂತಹ ಅತ್ಯಂತ ಜವಾಬ್ದಾರಿಯುತ ಕೆಲಸವನ್ನು ಸ್ವಭಾವತ: ವಿಕೃತನಾದ ಒಬ್ಬ ಯಕಶ್ಚಿತ್ ಟ್ರೋಲರ್‌ಗೆ ಒಪ್ಪಿಸಿ, ಅವನು ಮಾಡುವ ಅವಾಂತರಗಳಿಗೆ ಅವನೇ ಹೊಣೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿ, ಈಗ ಆತ ಮಾಡಿಟ್ಟಿರುವ ರಾಡಿಗಳನ್ನೆಲ್ಲ ಸಮರ್ಥಿಸುತ್ತಾ ಕೂತಿರುವ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆ ಇದೆ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಪಠ್ಯಪುಸ್ತಕ ಪರಿಷ್ಕರಣೆಗೆ ಅವಸರದಲ್ಲಿ ಮೌಖಿಕ ಸೂಚನೆ ನೀಡಿ ಘಟನೋತ್ತರ ಅನುಮತಿ ನೀಡಲು ಇದೇನು 40 ಪರ್ಸೆಂಟ್‌ ಕಮಿಷನ್ ಬಾಚುವ ರಸ್ತೆ ಕಾಮಗಾರಿಯೇ? ಈ ಮೌಖಿಕ ಸೂಚನೆಯಲ್ಲಿ ಕೆಲಸಮಾಡಿಸಿ ಅಮಾಯಕ ಗುತ್ತಿಗೆದಾರನನ್ನು ಬಲಿ ಪಡೆದಿರುವ ಈ ಸರ್ಕಾರ ಈಗ ಎಳೆಯ ಮಕ್ಕಳ ಭವಿಷ್ಯವನ್ನೇ ಬಲಿಕೊಡಲು ಹೊರಟಿದೆ. ಪಠ್ಯಪುಸ್ತಕ ಸಮಿತಿಯ ವಿಕೃತ ಅಧ್ಯಕ್ಷ ಮತ್ತು ಅವನ ಗ್ಯಾಂಗ್, ಜ್ಞಾನದೀವಿಗೆಗಳಾದ ಬಸವಣ್ಣ, ಅಂಬೇಡ್ಕರ್, ಜ್ಯೋತಿಬಾ ಪುಲೆ, ನಾರಾಯಣ ಗುರು, ಕೆಂಪೇಗೌಡ, ಕುವೆಂಪು ಮಾತ್ರವಲ್ಲ ಮಹರ್ಷಿ ವಾಲ್ಮೀಕಿಯವರನ್ನೂ ಬಿಡದೆ ಅವಮಾನಿಸಿದೆ. ಇಂತಹ ಜ್ಞಾನವಿರೋಧಿ ಮತ್ತು ಮನುಷ್ಯವಿರೋಧಿ ಪಠ್ಯವನ್ನು ತರಗತಿಗಳಲ್ಲಿ ಬೋಧನೆಗೆ ಅವಕಾಶ ನೀಡಿದರೆ ಅದು ನಾಡಿಗೆ ಬಗೆವ ದ್ರೋಹವಾಗುತ್ತದೆ’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಉಳಿದಿರುವುದೊಂದೇ ದಾರಿ. ಮೊದಲು ಶಿಕ್ಷಣ ಸಚಿವರನ್ನು ವಜಾಮಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನನ್ನು ಬಂಧಿಸಿ ಸರ್ಕಾರಕ್ಕೆ ಆತನಿಂದ ಆಗಿರುವ ನಷ್ಟವನ್ನು ಕಕ್ಕಿಸಿ ಮತ್ತು ಬರಗೂರು ರಾಮಚಂದ್ರಪ್ಪ ಸಮಿತಿಯ ಶಿಫಾರಸಿನ ಹಳೆಯ ಪಠ್ಯವನ್ನೇ ಈ ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಿ’ ಎಂದು ಅವರು ಆಗ್ರಹಿಸಿದ್ದಾರೆ.

‘ಇಷ್ಟೆಲ್ಲ ತಪರಾಕಿಗಳ ನಂತರವೂ ಮುಖ್ಯಮಂತ್ರಿಗಳು ಸಂಘ ಪರಿವಾರ ಒಡ್ಡಿರುವ ನೇಣಿಗೆ ಕೊರಳೊಡ್ಡುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ. ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ದದ ಪ್ರತಿಭಟನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿದೆ. ನಮ್ಮ ಕಾರ್ಯಕರ್ತರು ಈ ಹೋರಾಟವನ್ನು ಜಿಲ್ಲೆ, ತಾಲೂಕು, ಹೋಬಳಿ ಮಟ್ಟಕ್ಕೂ ಕೊಂಡೊಯ್ಯಲಿದ್ದಾರೆ. ಆಗ ಮುಖ್ಯಮಂತ್ರಿಗಳ ತಲೆದಂಡ ಅವರ ಪಕ್ಷಕ್ಕೂ ಅನಿವಾರ್ಯವಾಗಬಹುದು’ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT