ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆದೇಶ ತಕ್ಷಣ ಹಿಂಪಡೆಯಬೇಕು: ಸಿದ್ದರಾಮಯ್ಯ

Last Updated 8 ಆಗಸ್ಟ್ 2021, 10:36 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು’ ಎಂದು ರಾಜ್ಯ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು. ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕು’ ಎಂದಿದ್ದಾರೆ.

‘ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ನೀತಿಯನ್ನು ತರಾತುರಿಯಲ್ಲಿ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು‌ ಹೇಳಿದ್ದೆವು. ಆ ರೀತಿ ಮಾಡದೆ ಈ ಅನಾಹುತಕಾರಿ ನೀತಿಯನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ನೀತಿ ಜಾರಿಗೊಳಿಸಲಾಗುತ್ತಿದೆ’ ಎಂದು ಅವರು ಟೀಕಿಸಿದ್ದಾರೆ.

‘ಕನ್ನಡ ಭಾಷಾ ವಿಷಯವನ್ನು ಕೇವಲ ಎರಡು ಸೆಮಿಸ್ಟರ್‌ಗಳಿಗೆ, ಅಂದರೆ ಒಂದು ವರ್ಷ ಕಲಿಸುವುದಾಗಿ ಹಿಂದೆ ಹೇಳಿದ್ದರು. ರಾಜ್ಯದ ವಿವಿಧ ವಲಯಗಳಿಂದ ಪ್ರಬಲ ವಿರೋಧ ಬಂದ ಮೇಲೆಉನ್ನತ ಶಿಕ್ಷಣ ಸಚಿವಡಾ. ಅಶ್ವತ್ಥ ನಾರಾಯಣ ಈ ಸಮಸ್ಯೆ ಸರಿಪಡಿಸುವುದಾಗಿ ಹೇಳಿದ್ದರು. ಆದರೆ, ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟತೆ ಇಲ್ಲ. ಒಂದು ವರ್ಷಕ್ಕೆ ಸೀಮಿತಗೊಳಿಸುವರೊ ಇಲ್ಲ ಹಿಂದೆ ಇದ್ದಂತೆ ಎರಡು ವರ್ಷಗಳೂ ಕಲಿಸುವರೊ ಅಥವಾ ನಾವು ಒತ್ತಾಯ ಮಾಡಿದಂತೆ ಧಾರವಾಡ ಮುಂತಾದ ವಿಶ್ವವಿದ್ಯಾಲಯಗಳಲ್ಲಿ ಇರುವಂತೆ ಮೂರೂ ವರ್ಷಗಳಿಗೆ ಕಲಿಸಲಾಗುವುದೊ ಎಂಬ ಬಗ್ಗೆ ಉಲ್ಲೇಖ ಇಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಜಗತ್ತಿನ ಯಾವ ದೇಶಗಳಲ್ಲೂ ಇಲ್ಲದ ಕಲಿಕಾ ಕ್ರಮವನ್ನು ಈ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಅದರ ಪ್ರಕಾರ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿ ಶೇ 40ರಷ್ಟು ಕ್ರೆಡಿಟ್ಟುಗಳನ್ನು, ಅಂಕಗಳನ್ನು, ಆನ್ ಲೈನ್ ಮೂಲಕ ಕೇಳಿ ಪಡೆಯಬಹುದು. ತರಗತಿಗಳಿಗೆ ಹಾಜರಾಗಬೇಕಾದ ಅಗತ್ಯವಿಲ್ಲ. ಯಾವುದೇ ವಿಶ್ವವಿದ್ಯಾಲಯದಿಂದ ಶೇ 50ರಷ್ಟು ಅಂಕ, ಕ್ರೆಡಿಟ್ಟುಗಳನ್ನು‌ ಪಡೆಯಬೇಕು. ಇದರಿಂದಾಗಿ ಪ್ರಾಕ್ಟಿಕಲ್ ತರಗತಿಗಳನ್ನು ಹೊರತುಪಡಿಸಿ ಉಳಿದಂತೆ ತರಗತಿಗಳಿಗೆ ಹಾಜರಾಗುವ ಅಗತ್ಯವಿಲ್ಲ. (ಈಗಾಗಲೆ ಉಪನ್ಯಾಸಕರುಗಳಿಂದ ಪಠ್ಯಗಳನ್ನು ರೆಕಾರ್ಡ್ ಮಾಡಿಸಲಾಗಿದೆ). ಈ ನೀತಿಯ ಪ್ರಕಾರ, ವಿಶ್ವವಿದ್ಯಾಲಯಗಳನ್ನು ದೂರ ಶಿಕ್ಷಣ ಕೇಂದ್ರಗಳಂತೆ ಮಾಡಲಾಗುತ್ತಿದೆ’ ಎಂದೂ ಟೀಕಿಸಿದ್ದಾರೆ.

‘ಅನೇಕ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ, ನಿಧಾನಕ್ಕೆ ಸರ್ಕಾರಿ ವಿವಿಗಳನ್ನು ಮುಚ್ಚಿ ಖಾಸಗಿ ವಿವಿಗಳನ್ನು ಹೆಚ್ಚಿಸಲು, ಖಾಸಗಿಯವರಿಗೆ ವಿಪರೀತ ಹಣ ಮಾಡಲು ಬೇಕಾದ ವೇದಿಕೆಯನ್ನು ನೀತಿಯ ಮೂಲಕ ಸೃಷ್ಟಿಸಿಕೊಡಲು ಕೇಂದ್ರ- ರಾಜ್ಯ ಸರ್ಕಾರ ಹೊರಟಿವೆ. ಗುಣಮಟ್ಟದ ಪ್ರಾಧ್ಯಾಪಕರು ಮತ್ತು ಅತ್ಯಂತ ಪ್ರಾಯೋಗಿಕವಾದ ಹಾಗೂ ಬದುಕಿಗೆ ಹತ್ತಿರವಾದ ಕಲಿಕೆ ಮತ್ತು ಬೋಧನಾ ವಿಧಾನ ಗಳ‌ ಮೂಲಕ ಶಿಕ್ಷಣ ಕೊಡುವ ಕಡೆಗೆ ಯೋಚಿಸುವುದರ ಬದಲಾಗಿ‌ ವಿಶ್ವವಿದ್ಯಾಲಯಗಳನ್ನು ಸರ್ಟಿಫಿಕೇಟ್ ನೀಡುವ ಅಂಗಡಿಗಳಾಗಿ ಮಾಡಲಾಗುತ್ತಿದೆ. ಬಿಜೆಪಿಯು ಉನ್ನತ ಶಿಕ್ಷಣವನ್ನು‌ ಸರಿಪಡಿಸುವ ನೆಪದಲ್ಲಿ ಎಲ್ಲವನ್ನೂ ಧ್ವಂಸ ಮಾಡುತ್ತಿದೆ. ಖಾಸಗಿ ಬಂಡವಾಳಿಗರು ಶಿಕ್ಷಣದ ದಿಕ್ಕು ದೆಸೆಗಳನ್ನು ನಿರ್ಧರಿಸುವ ಹೊಲಸು ಕ್ರಮವನ್ನು ಪರಿಚಯಿಸಲಾಗುತ್ತಿದೆ. ಇದು ಸ್ಪಷ್ಟವಾಗಿ ಜನವಿರೋಧಿ ಕ್ರಮ. ದೇಶದ್ರೋಹವೆಂದರೆ ಜನದ್ರೋಹವೆ ಎಂದು ಅರಿತುಕೊಳ್ಳಬೇಕು’ ಎಂದಿದ್ದಾರೆ.

‘ಈಗಿನ ಪದವಿಯಲ್ಲಿ ಮೂರು ಮೇಜರ್ ವಿಷಯಗಳ ಬದಲಾಗಿ ಎರಡು ವಿಷಯಗಳನ್ನು ಕಲಿಸುವಂತೆ ಹಾಗೂ ಮೂರನೆ ವರ್ಷ ಅಥವಾ 5 ಮತ್ತು 6 ನೇ ಸೆಮಿಸ್ಟರುಗಳ ಆಚೆಗೆ ಒಂದು ವಿಷಯವನ್ನು ಮೇಜರ್ ಆಗಿ ಇನ್ನೊಂದನ್ನು ಮೈನರ್ ಆಗಿ ಅಥವಾ ಎರಡನ್ನೂ ಮೇಜರ್ ಆಗಿ ಕಲಿಸಲು ಆದೇಶಿಸಲಾಗಿದೆ. ಇದರಿಂದಾಗಿ ಸಾವಿರಾರು ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಮ್ಮ ವಿದ್ಯಾರ್ಥಿಗಳೂ ಆ ಎಲ್ಲ ವಿಷಯಗಳನ್ನು ಕಲಿಯಬೇಕಲ್ಲವೆ? ಆದರೆ, ಒಂದು ಮೇಜರ್ ಸಬ್ಜೆಕ್ಟ್ ಎಂದು ಮಾಡಿ ಮಕ್ಕಳನ್ನು ಕೂಪ ಮಂಡೂಕಗಳನ್ನಾಗಿಸಲು ಹೊರಟಿದ್ದಾರೆ. ಅಜ್ಞಾನವನ್ನು ಆರಾಧಿಸುವ ಮೂರ್ಖರ ಮಾತು ಕೇಳಿ ರಾಜ್ಯ ಮತ್ತು ರಾಷ್ಟ್ರಗಳ ಶಿಕ್ಷಣವನ್ನು ಕೊಲ್ಲಬಾರದು’ ಎಂದೂ ಅವರು ಒತ್ತಾಯಿಸಿದ್ದಾರೆ

‘ಪಿಯುಸಿ ಮಟ್ಟದಲ್ಲಿ‌ ವಿಜ್ಞಾನ ಕಲಿತವರು ಇದುವರೆಗೆ ಬಿಎಸ್ಸಿ ಹೋಗಲು‌ ಮನಸ್ಸಾಗದಿದ್ದರೆ ಬಿ.ಕಾಂ ಅಥವಾ ಬಿ ಎ ಗೆ ಸೇರಬಹುದಿತ್ತು. ಈ ಆಯ್ಕೆಗಳು ರದ್ದಾಗುತ್ತವೆ ಎಂಬಂತೆ ಆದೇಶ ಹೊರಡಿಸಲಾಗಿದೆ. ಶಿಕ್ಷಣ, ಪಠ್ಯಕ್ರಮಗಳನ್ನು ನಿರ್ಧರಿಸುವ ಹಕ್ಕು ರಾಜ್ಯಗಳಿಗೆ ಸಂಬಂಧಿಸಿದ್ದು. ರಾಜ್ಯಗಳ ಅಧಿಕಾರಗಳನ್ನು ದಮನ ಮಾಡಿ ಕೇಂದ್ರದ ಬಿಜೆಪಿ ಸರ್ಕಾರವು ಈ ನೀತಿಯನ್ನು ಜಾರಿಗೊಳಿಸಲು ಹೊರಟಿದೆ. ಇದಕ್ಕೆ ತಕ್ಕ ಹಾಗೆ ಕೇಂದ್ರದ ದಮನಕಾರಿ ನೀತಿಯನ್ನು ಪ್ರಶ್ನಿಸಬೇಕಾದ, ಪ್ರತಿಭಟಿಸಬೇಕಾದ ರಾಜ್ಯ ಬಿಜೆಪಿ ಸರ್ಕಾರವು ರಾಜ್ಯದ ಹಿತಾಸಕ್ತಿಯನ್ನು ಎಲ್ಲರಿಗಿಂತ ಮುಂದೆ ನಿಂತು ಬಲಿಕೊಡಲು ಇನ್ನಿಲ್ಲದ ಉತ್ಸಾಹ ತೋರುತ್ತಿದೆ. ಮೇಲ್ನೋಟಕ್ಕೆ ತಕ್ಷಣಕ್ಕೆ‌ ನನಗೆ ಕಂಡ ಅನಾಹುತಕಾರಿ ಅಂಶಗಳಿವು. ಆಳದಲ್ಲಿ ಇನ್ನೂ ಭೀಕರ ಹುನ್ನಾರಗಳಿವೆ’ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT