ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಶುಲ್ಕ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಪೋಷಕರ–ಶಾಲೆಗಳ ನಡುವಿನ ಸಂಘರ್ಷ ನಿವಾರಿಸಲು ಸಲಹೆ
Last Updated 15 ಜೂನ್ 2021, 7:41 IST
ಅಕ್ಷರ ಗಾತ್ರ

ಬೆಂಗಳೂರು: ‘ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು. ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆಹಿಡಿದಿರುವ ವೇತನ ನೀಡಬೇಕು’ ಎಂದೂ ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೊನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು, ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30ರಷ್ಟು ವಿನಾಯಿತಿ ನೀಡಿ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶ ಜಾರಿಗೆ ಬರಲಿಲ್ಲ’ ಎಂದಿದ್ದಾರೆ.

‘ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮರ್ಥ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ. ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

‘ಜುಲೈ 1ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಇದೇ 15ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ, ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ 30ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ, ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT