ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ, ಈಶ್ವರಪ್ಪ ವಜಾಕ್ಕೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ' ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ದಿನಗಳಲ್ಲಿ ಶಿವಮೊಗ್ಗದಲ್ಲಿ 3 ಕೊಲೆಗಳು ನಡೆದಿವೆ. ಶಿವಮೊಗ್ಗ ರಾಜ್ಯದ ಗೃಹ ಸಚಿವರ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರು ಅದೇ ಜಿಲ್ಲೆಯವರು. ಅಲ್ಲೇ ಈ ರೀತಿ ನಿರ್ಭಯವಾಗಿ ಕೊಲೆಗಳು ನಡೆಯುತ್ತವೆ ಎಂದರೆ ರಾಜ್ಯದಲ್ಲಿ ಸರ್ಕಾರ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ' ಎಂದಿದ್ದಾರೆ.
ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆ ಮೂಲಕ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ #ದೇಶದ್ರೋಹಿ_ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡುತ್ತೇವೆ' ಎಂದಿದ್ದಾರೆ.
Law And Order ಹ್ಯಾಷ್ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, 'ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು. ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ' ಎಂದು ಕಿಡಿಕಾರಿದ್ದಾರೆ.
ತಮ್ಮದೇ ಸರ್ಕಾರ 144 ಸೆಕ್ಷನ್ ಹಾಕಿದೆ, ಮೆರವಣಿಗೆಯಲ್ಲಿ ಸಚಿವ ಈಶ್ವರಪ್ಪ ಅವರೇ ಮುಂದೆ ನಿಂತಿದ್ದಾರೆ ಎಂದರೆ ಇದು ನಾಗರಿಕ ಸರ್ಕಾರವಾ? ಸಚಿವರೇ ಪಾಲಿಸದ ನಿಯಮವನ್ನು ಜನರು ಪಾಲಿಸುತ್ತಾರಾ? ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ' ಎಂದು ದೂರಿದ್ದಾರೆ.
ಸಿದ್ದರಾಮಯ್ಯ ಅವರ ಇನ್ನುಳಿದ ಟ್ವೀಟ್ಗಳು ಇಲ್ಲಿವೆ....
ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ.
ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? 5/11#LawAndOrder— Siddaramaiah (@siddaramaiah) February 22, 2022
ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಇತರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ಮಾಡಲಿ, ಅದಕ್ಕೆ ನಮ್ಮ ತಕರಾರಿಲ್ಲ.
ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕಟ್ಟುನಿಟ್ಟಾಗಿ ತನಿಖೆ ನಡೆಯಬೇಕು. 6/11#LawAndOrder
— Siddaramaiah (@siddaramaiah) February 22, 2022
ಕೊಲೆ ಪ್ರಕರಣದ ತನಿಖೆಯ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ ನಡೆದಿದೆ. ಈ ಎಲ್ಲಾ ಕಾರಣಗಳಿಗಾಗಿ ಒಟ್ಟು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸುತ್ತೇನೆ. 7/11#LawAndOrder
— Siddaramaiah (@siddaramaiah) February 22, 2022
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ @JPNadda ಅವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. 8/11#LawAndOrder
— Siddaramaiah (@siddaramaiah) February 22, 2022
ಈಶ್ವರಪ್ಪ ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. 9/11#LawAndOrder
— Siddaramaiah (@siddaramaiah) February 22, 2022
ಸಚಿವ ಈಶ್ವರಪ್ಪ ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. 10/11#LawAndOrder
— Siddaramaiah (@siddaramaiah) February 22, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.