ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಡಿಪಿ ಮಹಾ ಕುಸಿತಕ್ಕೆ ಅಡ್ಡಕಸುಬಿ ಆರ್ಥಿಕ ನಿರ್ವಹಣೆಯೇ ಕಾರಣ: ಸಿದ್ದರಾಮಯ್ಯ

Last Updated 1 ಸೆಪ್ಟೆಂಬರ್ 2020, 15:40 IST
ಅಕ್ಷರ ಗಾತ್ರ

ದೇಶದ ಜಿಡಿಪಿ ಶೇಕಡಾ 23.9ರಷ್ಟು ಕುಸಿತ ಕಂಡಿರುವುದು ಆಘಾತಕಾರಿ ಬೆಳವಣಿಗೆ ನಿಜ. ಆದರೆ ಈ ಕುಸಿತದ ಪೂರ್ಣ ಹೊಣೆಯನ್ನು ಕೊರೊನಾ ರೋಗದ ಮೇಲೆ ಹೇರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಜವಾಬ್ದಾರಿಯನ್ನು ನುಣುಚಿಕೊಳ್ಳುವುದು ಇನ್ನೂ ಹೆಚ್ಚಿನ ಆಘಾತಕಾರಿ ಬೆಳವಣಿಗೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಆರ್ಥಿಕತೆ ರೋಗಗ್ರಸ್ತವಾಗಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ. ಆರ್‌ಬಿಐಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರ ವರೆಗೆ ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ. ಆಗ ಕುರುಡು-ಕಿವುಡು ಆಗಿದ್ದ ಸರ್ಕಾರ ಈಗ ಕೊರೊನಾಕ್ಕಾಗಿ ರೋದಿಸುತ್ತಿದೆ.

2015ರಲ್ಲಿ ಜಿಡಿಪಿ ಅಂದಾಜು ಮಾಡುವ ಮೂಲವರ್ಷವನ್ನು 2004-05ರಿಂದ 2011-12ಕ್ಕೆ ಬದಲಾಯಿಸಲಾಯಿತು, ಅದರ ನಂತರ ಬಣ್ಣ ಬಯಲಾಗಬಾರದೆಂದು ಅಧಿಕೃತ ಅಂಕಿ ಅಂಶಗಳನ್ನೇ ತಡೆಹಿಡಿಯಲಾಯಿತು. ಈಗ ಎಲ್ಲವನ್ನು ಕೊರೊನಾ ಲೆಕ್ಕಕ್ಕೆ ಬರೆದು ಕೈತೊಳೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಹೊರಟಿದ್ದಾರೆ.

ಕೊರೊನಾ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿರುವುದು ಕೊರೊನಾ ಮಾರಿಯನ್ನು ಸರ್ಕಾರ ಎಷ್ಟುಗಂಭೀರವಾಗಿದೆ ಎನ್ನುವುದಕ್ಕೆ ಸಾಕ್ಷಿ.

ಲಾಕ್‌ಡೌನ್ ಅಗತ್ಯವಿತ್ತು ನಿಜ, ನಮ್ಮ ಪಕ್ಷ ಕೂಡಾ ಅದನ್ನು ಬೆಂಬಲಿಸಿತ್ತು. ಆದರೆ ಅವೈಜ್ಞಾನಿಕವಾಗಿ, ದಿನಕ್ಕೊಂದು ರೀತಿಯ ಅನಿಶ್ಚಿತ ನಿರ್ಧಾರಗಳ ಮೂಲಕ ಲಾಕ್‌ಡೌನ್ ಜಾರಿಗೊಳಿಸಿದ್ದ ಪರಿಣಾಮವಾಗಿ ಅದರಿಂದ ಲಾಭವಾಗಲಿಲ್ಲ, ನಷ್ಟವಾಗಿದ್ದೇ ಹೆಚ್ಚು. ಇದರ ಪೂರ್ಣ ಹೊಣೆಯನ್ನು ಪ್ರಧಾನ ಮಂತ್ರಿಯವರೇ ವಹಿಸಿಕೊಳ್ಳಬೇಕಾಗುತ್ತದೆ.

ದೇಶ ಎದುರಿಸುತ್ತಿರುವ ಈಗಿನ ಆರ್ಥಿಕ ದುಸ್ತಿತಿಗೆ ನೋಟು ಅಮಾನ್ಯೀಕರಣ, ದೋಷಪೂರಿತ ಜಿಎಸ್‌ಟಿಯ ಅವೈಜ್ಞಾನಿಕ ಜಾರಿ ಮತ್ತು ಕೆಲಸವೇ ಗೊತ್ತಿಲ್ಲದ ಅಡ್ಡಕಸುಬಿ ಸಚಿವರು ಕೂಡಾ ಕಾರಣ ಎಂದು ಅವರು ದೇಶದ ಮುಂದೆ ಮೊದಲು ತಪ್ಪೊಪ್ಪಿಕೊಳ್ಳಬೇಕು. ರೋಗದ ಕಾರಣ ತಿಳಿಯದೆ ಔಷಧಿ ಕೊಟ್ಟರೆ ರೋಗ ಗುಣವಾಗಲಾರದು.

-ಸಿದ್ದರಾಮಯ್ಯ, ವಿರೋಧ ಪಕ್ಷದನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT