ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್ ಜಾಲ: ರಾಜ್ಯ ಸರ್ಕಾರ, ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಸಿದ್ದರಾಮಯ್ಯ ಕಿಡಿ

Last Updated 11 ಸೆಪ್ಟೆಂಬರ್ 2020, 13:47 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ ಬಿಜೆಪಿ ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತಮ್ಮ ಪಕ್ಷದವರನ್ನು ರಕ್ಷಿಸುವ ಮತ್ತು ಈ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.

ಮಾದಕ ವಸ್ತುಗಳ ಹಾವಳಿಯ ನಿರ್ಮೂಲನೆಯ ಪ್ರಾಮಾಣಿಕ ಉದ್ದೇಶ ಮುಖ್ಯಮಂತ್ರಿಗೆ ಇರುವುದಾದರೆ, ಬೀದಿಯಲ್ಲಿ ನಿಂತು ವಿರೋಧ ಪಕ್ಷದ ನಾಯಕರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿ ತನಿಖೆಯ ಹಾದಿ ತಪ್ಪಿಸುತ್ತಿರುವ ಸಂಪುಟದ ಸಚಿವರು ಮತ್ತು ಪಕ್ಷದ ನಾಯಕರ ಬಾಯಿ ಮುಚ್ಚಿಸಿ ಪೊಲೀಸರಿಗೆ ಮುಕ್ತ ಹಸ್ತ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಅವರೇ, ಡಿಜೆಹಳ್ಳಿ ಗಲಭೆ ಬಗ್ಗೆ ನಿಮ್ಮದೇ ತನಿಖೆಯ ಪ್ರಹಸನ ಮಾಡಿ ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರಿದ್ದೀರಿ. ಈಗ ಡ್ರಗ್ಸ್ ಹಗರಣದ ತನಿಖೆಯ ವಿವರಗಳನ್ನು ಸೋರಿಕೆ ಮಾಡಿ ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ ಎಂದು ಪ್ರಶ್ನಿಸಿದ್ದಾರೆ.

ಪ್ರತಿಬಾರಿ ನಿಮ್ಮ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದ್ದೀರಿ. ಡ್ರಗ್ಸ್ ಹಗರಣದಲ್ಲಿ ಕೂಡಾ ಅದನ್ನೇ ಮಾಡುತ್ತಾ ಇದ್ದೀರಿ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದರು.

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ ನೋಡಲಾಗುವುದಿಲ್ಲ. ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT