ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಬೆಂಗಳೂರು ನಗರದಲ್ಲಿ ಮಳೆ ಮತ್ತು ಪ್ರವಾಹದಿಂದ ಜನ ಸಂಕಷ್ಟಕ್ಕೆ ತುತ್ತಾಗಲು ಮುಂಜಾಗ್ರತಾ ಕ್ರಮ ಕೈಗೊಳ್ಳದ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ವಿಧಾನಸಭೆಯಲ್ಲಿ ಮಳೆ ಮತ್ತು ಪ್ರವಾಹದ ಕುರಿತ ಚರ್ಚೆಯಲ್ಲಿ ಮಾತನಾಡಿ, ‘ನೈಸರ್ಗಿಕ ವಿಕೋಪಗಳಿಂದ ಸಂಭವಿಸುವ ಹಾನಿಗೆ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್ಎಫ್) ಮಾರ್ಗಸೂಚಿಯೇ ಮಾನದಂಡ. ಪ್ರತಿ ಐದು ವರ್ಷಗಳಿಗೊಮ್ಮೆ ಮಾರ್ಗಸೂಚಿ ಪರಿಷ್ಕರಣೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2015 ರಿಂದ ಈಚೆಗೆ ಮಾರ್ಗಸೂಚಿ ಪರಿಷ್ಕರಣೆ ಮಾಡಿಲ್ಲ. ಮಾರ್ಗಸೂಚಿ ಪರಿಷ್ಕರಣೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲು ರೈತರಿಗೆ ಸಾಧ್ಯವಾಗಿಲ್ಲ. ಇವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
‘ಬೆಳೆ ವಿಮೆ ಯೋಜನೆಯಲ್ಲೂ ರೈತರಿಗಾದ ನಷ್ಟಕ್ಕೆ ಪರಿಹಾರ ಸಿಗುವುದಿಲ್ಲ. ಆದ್ದರಿಂದ ಇವುಗಳಿಗೂ ಪರಿಹಾರ ನೀಡಬೇಕು. ರೈತರು ಬಿತ್ತನೆ ಬೀಜ, ಗೊಬ್ಬರ ಮುಂತಾದವುಗಳನ್ನು ಖರೀದಿ ಮಾಡಿ, ಬಿತ್ತನೆ ಮಾಡಲಾಗದೇ ನಷ್ಟಕ್ಕೀಡಾಗಿದ್ದಾರೆ. ಸರ್ಕಾರ ಈ ಎಲ್ಲ ರೈತರಿಗೂ ಪರಿಹಾರ ನೀಡಬೇಕು’ ಎಂದು ಹೇಳಿದರು. ‘ಬೆಂಗಳೂರಿನಲ್ಲಿ ಅನೇಕ ಕಡೆಗಳಲ್ಲಿ ಪ್ರವಾಹ ವೀಕ್ಷಣೆಗೆ ಹೋದಾಗ, ಜನ ತಮಗೆ ನ್ಯಾಯಯುತ ಪರಿಹಾರ ಕೊಡಿಸಿ ಎಂದು ನನ್ನಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಒತ್ತುವರಿ ತೆರವು ಮತ್ತು ಕಾಲುವೆಗಳ ಅಗಲೀಕರಣ ಮಾಡಬೇಕು’ ಎಂದು ಸಲಹೆ ನೀಡಿದರು.
ಎರಡು ದಿನಗಳಲ್ಲಿ ರೈತರಿಗೆ ಪರಿಹಾರ:ಬೊಮ್ಮಾಯಿ: ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ನಷ್ಟವಾಗಿರುವ ಪ್ರಕರಣಗಳಲ್ಲಿ ರೈತರಿಗೆ ಎರಡು ದಿನಗಳಲ್ಲಿ ಪರಿಹಾರ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿದ್ದರಾಮಯ್ಯ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ‘1.04 ಲಕ್ಷ ಹೆಕ್ಟೇರ್ ವಿಸ್ತೀರ್ಣದ ಜಮೀನಿನ ಸಮೀಕ್ಷೆ ಪೂರ್ಣಗೊಂಡಿದೆ. ಬೆಳೆಹಾನಿಗೆ ಪರಿಹಾರ ನೀಡಲು ₹11 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದರು.
ಎರಡು ದಿನಗಳಲ್ಲಿ ರೈತರಿಗೆ ಪರಿಹಾರ:ಬೊಮ್ಮಾಯಿ
ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ನಷ್ಟವಾಗಿರುವ ಪ್ರಕರಣಗಳಲ್ಲಿ ರೈತರಿಗೆ ಎರಡು ದಿನಗಳಲ್ಲಿ ಪರಿಹಾರ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿದ್ದರಾಮಯ್ಯ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ‘1.04 ಲಕ್ಷ ಹೆಕ್ಟೇರ್ ವಿಸ್ತೀರ್ಣದ ಜಮೀನಿನ ಸಮೀಕ್ಷೆ ಪೂರ್ಣಗೊಂಡಿದೆ. ಬೆಳೆಹಾನಿಗೆ ಪರಿಹಾರ ನೀಡಲು ₹ 11 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಎರಡು ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತವನ್ನು ವರ್ಗಾವಣೆ ಮಾಡಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.