ಬೆಂಗಳೂರು: ಪರಿಶಿಷ್ಟ ಪಂಗಡದ (ಎಸ್ಟಿ) ಮೀಸಲಾತಿ ಪ್ರಮಾಣವನ್ನು ಶೇ 3ರಿಂದ 7.5ಕ್ಕೆ ಹೆಚ್ಚಿಸಬೇಕು ಮತ್ತು ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿರುವ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಸಮುದಾಯದ ಸಂಘಟನೆಗಳ ಜೊತೆ ಫ್ರೀಡಂ ಪಾರ್ಕ್ನಲ್ಲಿ ಬುಧವಾರ (ಅ.21) ಸ್ವಾಮೀಜಿ ಧರಣಿ ಆರಂಭಿಸಿದ್ದಾರೆ.
ಅದಕ್ಕೂ ಮೊದಲು ಅವರು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿ ಜಾರಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಸಮುದಾಯದ ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದರು. ಬಳಿಕ, ಸಮುದಾಯದ ಮುಖಂಡರು ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿದರು.
ಗೃಹ ಸಚಿವರ ಭರವಸೆ: ‘ಮೀಸಲಾತಿ ಹೆಚ್ಚಳ ಮತ್ತು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಸಂಬಂಧಿಸಿದಂತೆ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕರಾದ ರಾಜುಗೌಡ, ರೇಣುಕಾಚಾರ್ಯ ಅವರು ಬುಧವಾರ ಭೇಟಿ ನೀಡಿ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದ ಹೊರತು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ವಾಮೀಜಿ ಪಟ್ಟು ಹಿಡಿದಿದ್ದಾರೆ.
‘ಸಮುದಾಯದ ಬೇಡಿಕೆಗಳ ಕುರಿತು ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಕೆಲವೇ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಧರಣಿ ಕೈಬಿಡಬೇಕು’ ಎಂದು ಬೊಮ್ಮಾಯಿ ಮನವಿ ಮಾಡಿದರೂ ಸ್ವಾಮೀಜಿ ಸಮ್ಮತಿಸಲಿಲ್ಲ.
‘ಪರಿಶಿಷ್ಟ ಪಂಗಡಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸುವಂತೆ ನ್ಯಾಯಮೂರ್ತಿ ನಾಗಮೋಹನದಾಸ್ ನೀಡಿದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಬೇಕು. ಮೀಸಲಾತಿ ಪ್ರಮಾಣ ಹೆಚ್ಚಿಸದೇ ಇರುವುದರಿಂದ ಹಲವು ವರ್ಷಗಳಿಂದ ಸಮುದಾಯದ ವಿದ್ಯಾರ್ಥಿಗಳು ಮತ್ತು ಯುವ ಜನರು ಶಿಕ್ಷಣ ಮತ್ತು ಉದ್ಯೋಗ ಸೌಲಭ್ಯ ದಿಂದ ವಂಚಿತರಾಗಿದ್ದಾರೆ’ ಎಂದೂ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.