ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕನ್ನಡದ ಕತ್ತು ಹಿಸುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದೆ: ಕುಮಾರಸ್ವಾಮಿ

Last Updated 29 ಅಕ್ಟೋಬರ್ 2022, 7:27 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಕನ್ನಡದ ಕತ್ತು ಹಿಸುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಮತ್ತೊಮ್ಮೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿ ಅನುಸರಿಸಿರುವುದನ್ನು ಎಚ್‌ಡಿಕೆ ಖಂಡಿಸಿದ್ದಾರೆ.

‘ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇದು ಹೊಸ ಸಾಕ್ಷಿ’ ಎಂದು ಟ್ವೀಟ್ ಮಾಡಿದ್ದಾರೆ.

‘ಕಾನ್‌ಸ್ಟೆಬಲ್‌ ಹುದ್ದೆಗಳ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಗಡಿ ಭದ್ರತಾ ಪಡೆ(ಬಿಎಸ್‌ಎಫ್‌), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌), ಇಂಡೊ ಟಿಬೆಟನ್‌ ಗಡಿ ಪೊಲೀಸ್‌ (ಐಟಿಬಿಪಿ), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಸಚಿವಾಲಯ ಭದ್ರತಾ ಪಡೆಯಲ್ಲಿ (ಎಸ್‌ಎಸ್‌ಎಫ್‌) ಕಾನ್‌ಸ್ಟೆಬಲ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ರೈಫಲ್‌ಮೆನ್‌ (ಜನರಲ್‌ ಡ್ಯೂಟಿ) ಹಾಗೂ ಮಾದಕ ದ್ರವ್ಯ ನಿಯಂತ್ರಣ (ಎನ್‌ಸಿಬಿ) ಇಲಾಖೆಯಲ್ಲಿ ಸಿಪಾಯಿ ಹುದ್ದೆಗಳಿಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ.

ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ, ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರ್ಕಾರವೇ ಕೊಡುತ್ತಿರುವ ಕುಮ್ಮಕ್ಕು ಎಂದು ಕುಮಾರಸ್ವಾಮಿ ದೂರಿದ್ದಾರೆ.

ಕೇಂದ್ರ ಸರ್ಕಾರ ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ ಎಂದು ಎಚ್‌ಡಿಕೆ ತಿಳಿಸಿದ್ದಾರೆ.

ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT