ಬೆಂಗಳೂರು: ‘ಮುದ್ರಾಂಕ ಶುಲ್ಕದ ಹೆಸರಿನಲ್ಲಿ ರಾಜ್ಯ ಸರ್ಕಾರ ನಾಗರಿಕರ ಹಗಲು ದರೋಡೆ ನಡೆಸಿದೆ’ ಎಂದು ಹೈಕೋರ್ಟ್ ಕಿಡಿ ಕಾರಿದೆ.
ಹೆಚ್ಚುವರಿ ಮುದ್ರಾಂಕ ಶುಲ್ಕ ಆಕ್ಷೇಪಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಹೆಚ್ಚುವರಿ ಮುದ್ರಾಂಕ ಶುಲ್ಕವನ್ನು ವಾರ್ಷಿಕ ಶೇ 12ರ ಬಡ್ಡಿಯಂತೆ ಪಾವತಿಸುವಂತೆ ಪ್ರತಿವಾದಿಗಳಿಗೆ ಆದೇಶಿಸಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದ ಸರ್ವೇ ನಂಬರ್ 101ರಲ್ಲಿ ಅರ್ಜಿದಾರರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೆಚ್ಚುವರಿ ಮುದ್ರಾಂಕ ಶುಲ್ಕ ಹೇರಿದ್ದನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಪೀಠ ಈ ಆದೇಶ ನೀಡಿದೆ.
‘ಸರ್ಕಾರವು, ಅಭಿವೃದ್ಧಿಗಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರವನ್ನೂ ನೀಡುವುದಿಲ್ಲ. ಬದಲಿ ಜಮೀನನ್ನೂ ಕೊಡುವುದಿಲ್ಲ. ಮೇಲಾಗಿ ಮುದ್ರಾಂಕ ಶುಲ್ಕದ ಬರೆಯನ್ನೂ ಎಳೆಯುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿತು.