ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ವಿರೋಧಿಸಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ: ಡಿಕೆಶಿ

Last Updated 25 ಜೂನ್ 2022, 8:37 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ಖಂಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಎಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಈ ಯೋಜನೆಯಿಂದ ಯುವಕರಿಗೆ ದೊಡ್ಡ ಅನ್ಯಾಯವಾಗಲಿದ್ದು, ‌ಪ್ರತಿಭಟನೆ ಅನಿವಾರ್ಯ. ಎಷ್ಟು ಸಾಧ್ಯವೋ ಅಷ್ಟು ಜನರನ್ನು ಸೇರಿಸಿ ಈ ಅನ್ಯಾಯ ವಿಚಾರವನ್ನು ಜನರಿಗೆ ತಲುಪಿಸುವಂತೆ ಸೂಚಿಸಲಾಗಿದೆ‘ ಎಂದರು.

ಯೋಜನೆ ಕೈಬಿಡುವ ಚಿಂತನೆಯೇ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ಸರ್ಕಾರ ಏನಾದರೂ ಹೇಳಲಿ. ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. ನಮ್ಮ ಮಕ್ಕಳು ನಾಲ್ಕು ವರ್ಷ ಸೇನೆಯಲ್ಲಿ ಸೇವೆಯಲ್ಲಿ ಸಲ್ಲಿಸಿ ನಂತರ ಬೇರೆಯವರಿಗೆ ಭದ್ರತಾ ಸಿಬ್ಬಂದಿ ಆಗಲು ಬಿಡುವುದಿಲ್ಲ’ ಎಂದರು.

‘ಬಿಜೆಪಿ ನಾಯಕರ ಮಕ್ಕಳು ಬೇಕಿದ್ದರೆ ಆಗ್ನಿಪಥ ಮೂಲಕ ಸೇನೆ ಸೇರಲಿ. ಅವರ ಮಕ್ಕಳು ಮಾತ್ರ ವೈದ್ಯರು, ಎಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಭದ್ರತಾ ಸಿಬ್ಬಂದಿ ಆಗಬೇಕಾ? ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ, ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ. ಯೋಧರ ವೇತನ ಹಾಗೂ ಪಿಂಚಣಿಗೆ ಸಮಸ್ಯೆ ಇದ್ದರೆ, ಸರ್ಕಾರ ಬೇರೆ ವಿಚಾರಗಳಿಗೆ ಸೆಸ್ ಹಾಕುತ್ತಿರುವಂತೆ ಸೆಸ್ ಹಾಕಲಿ' ಎಂದರು.

ಕಾಂಗ್ರೆಸ್‌ ತ್ಯಜಿಸಲು ಹಿರಿಯ ನಾಯಕ ಎಂ.ಆರ್. ಸೀತಾರಾಮ್ ನಿರ್ಧರಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಅವರು ಪಕ್ಷದ ಹಿರಿಯ ನಾಯಕರು. ಅವರು ಶಾಸಕರಾಗಿದ್ದು, ಮಂತ್ರಿಯಾಗಿದ್ದರು. ಸದನದಲ್ಲಿ ಆಡಳಿತ ಪಕ್ಷದ ನಾಯಕರಾಗಿದ್ದರು. ಪಕ್ಷ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಟ್ಟಿತ್ತು. ಆದರೆ, ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಕಳೆದ ಬಾರಿ ವಿಧಾನ ಪರಿಷತ್ ಎರಡು ಸ್ಥಾನಗಳ ಪೈಕಿ ಹಿರಿಯರಾದ ನಸೀರ್‌ ಅಹ್ಮದ್‌ ಮತ್ತು ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದ್ದೆವು. ಈ ಬಾರಿ ಜೈರಾಮ್ ರಮೇಶ್ ಅವರಿಗೆ ನೀಡಿದ್ದೇವೆ. ಇದರಲ್ಲಿ ಏನಾದರೂ ತಪ್ಪಿದ್ದರೆ ಹೇಳಲಿ‘ ಎಂದರು.

‘ಈ ಅಸಮಾಧಾನಿತರ ಸಭೆ ಶಿಸ್ತು ಉಲ್ಲಂಘನೆ ಆಗುವುದಿಲ್ಲವೇ‘ ಎಂಬ ಪ್ರಶ್ನೆಗೆ, ‘ಆ ವಿಚಾರವಾಗಿ ಪಕ್ಷದ ಶಿಸ್ತು ಸಮಿತಿ ನೋಡಿಕೊಳ್ಳುತ್ತದೆ. ನಮ್ಮ ಪಕ್ಷ ಅವರನ್ನು ಗುರುತಿಸಿ ಶಾಸಕರನ್ನು, ಮಂತ್ರಿಯನ್ನಾಗಿ ಹಾಗೂ ಪರಿಷತ್ ಸದಸ್ಯರನ್ನಾಗಿ ಮಾಡಿದೆ' ಎಂದರು.

ಬಿಜೆಪಿ ಕಡೆಗೆ ಅವರು ಒಲವು ಇರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಹೆಸರು ಮಾಡಿದ್ದಾರೆ. ಬಿಜೆಪಿಯವರು ಯಾರನ್ನೂ ಬಿಡುವುದಿಲ್ಲ. ಬಿಜೆಪಿಯವರು ಯಾವ ರೀತಿ ಪ್ರಯತ್ನಿಸುತ್ತಿದ್ದಾರೆ, ಚಿಕ್ಕಬಳ್ಳಾಪುರದಿಂದ ಯಾರನ್ನು ಕಳುಹಿಸಿದ್ದರು ಎಂಬ ಮಾಹಿತಿ ನನ್ನ ಬಳಿ ಇದೆ. ಅವರದು ಬಹಳ ಗೌರವಯುತ ಕುಟುಂಬ ಅವರು ಈ ರೀತಿ ಮಾಡುವುದಿಲ್ಲ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT