ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ: ಎಂಇಎಸ್‌ ನಿಷೇಧಕ್ಕೆ ಕರವೇ ಆಗ್ರಹ

Last Updated 20 ಡಿಸೆಂಬರ್ 2021, 20:34 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದ ಅನಗೋಳದ ಕನಕದಾಸ ಕಾಲೊನಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರನ್ನು ಕೂಡಲೇ ಬಂಧಿಸಬೇಕು ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯನ್ನು ರಾಜ್ಯದಲ್ಲಿ ನಿಷೇಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಟಿ.ಎ. ನಾರಾಯಣಗೌಡ ಮತ್ತು ಪ್ರವೀಣ್‌ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ನಿಷೇಧಾಜ್ಞೆ ಇದ್ದರೂ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು 2 ತಂಡಗಳಾಗಿ ಪ್ರತ್ಯೇಕವಾಗಿ ಬರುತ್ತಿದ್ದ ಸಾವಿರಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಪುಣೆ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–4ರಲ್ಲೇ ತಡೆದು ವಶಕ್ಕೆ ಪಡೆದರು. ಈ ವೇಳೆ, ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನೂಕಾಟ ಉಂಟಾಯಿತು. ಕಾರ್ಯಕರ್ತೆಯರು ಸೇರಿದಂತೆ ಕೆಲವರು ಪೊಲೀಸ್ ವಾಹನದ ಮೇಲೇರಿ, ಎಂಇಎಸ್ ವಿರುದ್ಧ ಘೋಷಣೆ ಕೂಗಿದರು. ಕೆಲವರು ಲಾರಿ ಕೆಳಗೆ ಮಲಗಿ ಪ್ರತಿಭಟಿಸಿದರು. ಇನ್ನೂ ಕೆಲವರು, ಮಹಾರಾಷ್ಟ್ರ ನೋಂದಣಿಯ ವಾಹನದ ಮೇಲೆ ದಾಳಿ ಮಾಡಲು ಯತ್ನಿಸಿದರು. ಆದರೆ, ಪೊಲೀಸರು ಅವಕಾಶ ಕೊಡಲಿಲ್ಲ.

‘ಇದೇ 29ಕ್ಕೆ ಬೆಂಗಳೂರಿನಲ್ಲಿ ಹೋರಾಟಗಾರರ ಸಭೆ ಕರೆಯಲಾಗಿದೆ. ರಾಜ್ಯದಲ್ಲಿ ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ಮತ್ತು ಆ ಸಂಘಟನೆಯವರ ಪುಂಡಾಟ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡುವ ಬಗ್ಗೆ ಅಂದು ಚರ್ಚಿಸಲಾಗುವುದು’ ಎಂದು ಕರವೇ ಪ್ರವೀಣ್‌ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ತಿಳಿಸಿದರು. ಎಂಇಎಸ್‌ ಕೃತ್ಯಗಳ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಕನ್ನಡ ಬಾವುಟಗಳು ರಾರಾಜಿಸಿದವು.ಮುಂಜಾಗ್ರತೆಯಾಗಿ ಟೋಲ್‌ನಲ್ಲಿ 200ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT