ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕೈಗೊಂಡ ಕ್ರಮಗಳಿಂದಾಗಿ ಮಕ್ಕಳು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದು, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ‘ಶಿಕ್ಷಕ ಮಿತ್ರ’ ಆ್ಯಪ್, ಸಚಿವ ಸುರೇಶ್ ಕುಮಾರ್ ಬರೆದ ‘ಶಿಕ್ಷಣ ಯಾತ್ರೆ’ ಮತ್ತು ‘ವಿದ್ಯಾ ವಿನೀತಾ’ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗಿರುವುದು ಶಿಕ್ಷಣ ಇಲಾಖೆಯ ಪ್ರಗತಿಯ ಸೂಚನೆಯಾಗಿದೆ ಎಂದೂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
‘ಶಿಕ್ಷಕ ಮಿತ್ರ’ ಆ್ಯಪ್: ಸಾರ್ವತ್ರಿಕ ವರ್ಗಾವಣೆಯ ಅರ್ಜಿ ಸಲ್ಲಿಕೆಯೂ ಸೇರಿದಂತೆ ಎಲ್ಲ ಕಾರ್ಯಗಳನ್ನೂ ನಿರ್ವಹಿಸಬಹುದಾದ ‘ಶಿಕ್ಷಕ ಮಿತ್ರ’ ಆ್ಯಪ್ ಶಿಕ್ಷಕರ ಸ್ನೇಹಿಯಾಗಿದೆ. ಶಿಕ್ಷಕರು ತಮ್ಮ ಕೆಲಸಗಳಿಗಾಗಿ ಶಾಲೆಗಳಿಗೆ ರಜೆ ಹಾಕಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು.
ಶಿಕ್ಷಕರು ತಾವು ಕುಳಿತಲ್ಲೇ ತಮ್ಮ ಸೇವಾ ವಿಷಯಗಳನ್ನು,ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದುಎಂದರು.