ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ ಚೀಟಿ ಹೊಂದಿರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ: ಸುನಿಲ್‌ಕುಮಾರ್‌

Last Updated 18 ಆಗಸ್ಟ್ 2021, 10:57 IST
ಅಕ್ಷರ ಗಾತ್ರ

ಬೆಂಗಳೂರು: ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ನೀಡುವುದೂ ಸೇರಿ ಬಜೆಟ್‌ನಲ್ಲಿ ಘೋಷಿಸಿರುವ ಎಲ್ಲ ಯೋಜನೆಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸುವುದಾಗಿ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ನಗರದ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆ, ವಿದ್ಯುತ್ ಸರಬರಾಜು ಕಂಪನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಪರಾಮರ್ಶೆ ಸಭೆಯನ್ನು ನಡೆಸಿ ಮಾತನಾಡಿದರು.

ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರ್ಕಾರದ ಸಹಯೋಗದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಟ್ರಾನ್ಸ್‌ಫಾರ್ಮರ್‌ಗಳ ದುರಸ್ಥಿ, ಬದಲಾವಣೆ ಕುರಿತಂತೆ ಬಹಳಷ್ಟು ದೂರುಗಳು ಬರುತ್ತವೆ. ಅವುಗಳ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾವಣೆ ಮಾಡಲು ತಡ ಮಾಡಬಾರದು.ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಸಲ್ಲಿಕೆಯಾಗಬೇಕಾಗಿರುವ ಪ್ರಸ್ತಾವನೆಗಳನ್ನೂ ತಡ ಮಾಡದೇ ನಿಗದಿತ ಕಾಲಾವಧಿಯೊಳಗೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡುವ ಕೆಲಸವೂ ಸಹ ಕಾಲಮಿತಿಯೊಳಗೆ ಮತ್ತು ಪರಿಣಾಮಕಾರಿಯಾಗಿ ಆಗಬೇಕು. ಅನಧಿಕೃತ ಸಂಪರ್ಕ, ವಿದ್ಯುತ್ ಸೋರಿಕೆ, ವಿದ್ಯುತ್ ಸಂಪರ್ಕ ನೀಡುವಲ್ಲಿ ವಿಳಂಬ, ಮೀಟರ್‌ ಅಳವಡಿಕೆಯಲ್ಲಿ ಆಗುವ ವಿಳಂಬ ಇತ್ಯಾದಿ ಕಾರಣಗಳಿಂದ ಇಂಧನ ಸರಬರಾಜು ಕಂಪನಿಗಳಿಗಾಗುವ ನಷ್ಟ ತಡೆಯಲು ಕಾರ್ಯಯೋಜನೆ ರೂಪಿಸಬೇಕು ಎಂದರು.

ಕೃಷಿ, ಕೈಗಾರಿಕೆ ಮತ್ತು ಎಲ್ಲಾ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ಆದ್ಯತೆಯಾಗಬೇಕು ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ವಿದ್ಯುತ್ ರೀಚಾರ್ಜ್ ಕೇಂದ್ರಗಳ ಆರಂಭಕ್ಕೆ ಆದ್ಯತೆ: ವಿದ್ಯುತ್ ಚಾಲಿತ ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ತಯಾರಾಗುತ್ತಿರುವುದರಿಂದ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. ಈಗಾಗಲೇ ಗುರುತಿಸಿರುವ ಸ್ಥಳಗಳಲ್ಲಿ ವಿದ್ಯುತ್ ರೀಚಾರ್ಜಿಂಗ್ ಮಾಡುವ ಕಾರ್ಯಕ್ಕೆ ವೇಗ ನೀಡಬೇಕೆಂದು ಅವರು ಸೂಚಿಸಿದರು.

ಗ್ರಾಹಕ ಸಂಬಂಧಿ ಸಮಸ್ಯೆಗಳ ಪರಿಹಾರ, ಹೊಸ ವಿದ್ಯುತ್ ಸಂಪರ್ಕ ನೀಡಿಕೆ ಸೇರಿದಂತೆ ವಿವಿಧ ಸೇವೆಗಳನ್ನು ಒಂದೇ ಕಡೆ 24 ಗಂಟೆಯೊಳಗೆ ಒದಗಿಸುವ ಫಾಸ್ಟ್‌ಟ್ರಾಕ್‌ ಸೆಲ್ ಅನ್ನು ಕೂಡಲೇ ಆರಂಭಿಸಲು ಸಚಿವರು ಆದೇಶಿಸಿದರು.

ಸಭೆಯಲ್ಲಿ ಕೆಜಿಎಫ್ ಉಪವಿಭಾಗಕ್ಕೆ ಜುಲೈ ತಿಂಗಳ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ಅಲ್ಲಿನ ಸಹಾಯಕ ಎಂಜಿನಿಯರ್ ಹೇಮಲತಾ ಅವರಿಗೆ ಪ್ರಶಸ್ತಿ ಫಲಕ ಮತ್ತು ₹10 ಸಾವಿರ ನಗದು ಬಹುಮಾನವನ್ನು ಸುನಿಲ್‌ಕುಮಾರ್‌ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT