ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಆಯುಕ್ತ ಎಂ.ಬಿ.ರಾಜೇಶ ಗೌಡ ಅವರನ್ನು ವರ್ಗಾವಣೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಕುರಿತ ‘ಪ್ರಜಾವಾಣಿ’ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕೆಪಿಸಿಸಿ, ‘ಗೃಹಸಚಿವ ಆರಗ ಜ್ಞಾನೇಂದ್ರ ಸೇರಿ ವಿವಿಐಪಿಗಳಿಗೆ ಬಿಡಿಎ ನಿವೇಶನ ಹಂಚಿಕೆ ಅಕ್ರಮ ಎಂದು ಸುಪ್ರೀಂ ಕೋರ್ಟ್ ಗುಡುಗಿದೆ. ಈ ಹಿನ್ನೆಲೆಯಲ್ಲಿ ಆಯುಕ್ತರಿಗೆ ವರ್ಗಾವಣೆ ಆದೇಶವಾಗಿದೆ’ ಎಂದು ಆರೋಪಿಸಿದೆ.
ಅಭಿವೃದ್ಧಿಯಲ್ಲಿ ಬೆಂಗಳೂರನ್ನು 'ಜಾಗತಿಕ ನಗರ' ಮಾಡಬೇಕಿದ್ದ ಬಿಡಿಎ, ಬಿಜೆಪಿ ಆಡಳಿತದಲ್ಲಿ 'ಭ್ರಷ್ಟರ ಡೆವೆಲಪ್ಮೆಂಟ್ ಅಥಾರಿಟಿ' ಆಗಿದೆ ಎಂದೂ ಕಾಂಗ್ರೆಸ್ ಟೀಕಿಸಿದೆ.
ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಬಹು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ಬಿಡಿಎ ಆಯುಕ್ತ ಎಂ.ಬಿ.ರಾಜೇಶ ಗೌಡ ಅವರನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದೆ.
ಕೋರ್ಟ್ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ರಾಜೇಶ ಗೌಡ ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದೂ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಗೃಹಸಚಿವ @JnanendraAraga ಸೇರಿ ವಿವಿಐಪಿಗಳಿಗೆ BDA ನಿವೇಶನ ನೀಡಿಕೆ ಅಕ್ರಮ ಎಂದು ಸುಪ್ರೀಂ ಕೋರ್ಟ್ ಗುಡುಗಿದೆ.