ನವದೆಹಲಿ: ಅಕ್ರಮ ಡಿನೋಟಿಫಿಕೇಶನ್ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತಿತರರ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
10 ವರ್ಷಗಳ ಹಿಂದೆ ಬೆಂಗಳೂರು ಉತ್ತರ ವಿಭಾಗದಲ್ಲಿ ನಡೆದಿದೆ ಎನ್ನಲಾದ 20 ಎಕರೆ ಭೂಮಿಯ ಡಿನೋಟಿಫಿಕೇಶನ್ನಲ್ಲಿ ಅಕ್ರಮ ನಡೆದಿದೆ ಎಂದು ಎಂ.ಆಲಂ ಬಾಷಾ ಅವರು ದೂರು ನೀಡಿದ್ದರು.
ಈ ದೂರಿನ ಮೇರೆಗೆ ದಾಖಲಾದ ಪ್ರಕರಣದಲ್ಲಿ, ಯಡಿಯೂರಪ್ಪ ಅವರ ವಿರುದ್ಧದ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಕೈಬಿಟ್ಟಿತ್ತು. ಆದರೆ, ವಿಚಾರಣೆಯನ್ನು ಕೈಬಿಟ್ಟ ನ್ಯಾಯಾಲಯದ ಆದೇಶವನ್ನು ರಾಜ್ಯ ಹೈಕೋರ್ಟ್ ಕಳೆದ ಮಾರ್ಚ್ 17ರಂದು ವಜಾಗೊಳಿಸಿತ್ತು. ಕೂಡಲೇ ವಿಚಾರಣೆ ಕೈಗೆತ್ತಿಕೊಳ್ಳುವಂತೆಯೂ ಆದೇಶಿಸಿತ್ತು.
ಅಲ್ಲದೆ, ಯಡಿಯೂರಪ್ಪ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ 2012ರಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಆಧರಿಸಿ ವಿಚಾರಣೆ ಮುಂದುವರಿಸಬೇಕು ಎಂದೂ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತ್ತು.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ವಿ.ರಾಮ ಸುಬ್ರಮಣಿಯನ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶವನ್ನು ಅಮಾನತಿನಲ್ಲಿರಿಸಿತು.
ಖಾಸಗಿ ದೂರಿನಲ್ಲಿ ಯಡಿಯೂರಪ್ಪ ಅವರ ಹೆಸರು ಇದೆ. ಆದರೆ, ಅವರ ವಿರುದ್ಧ ಯಾವುದೇ ಆರೋಪಗಳನ್ನು ಉಲ್ಲೇಖಿಸಲಾಗಿಲ್ಲ. ಇದನ್ನು ಹೈಕೋರ್ಟ್ ಗಮನಿಸಬೇಕಿತ್ತು ಎಂದು ಯಡಿಯೂರಪ್ಪ ಪರ ವಕೀಲ ಖುಷ್ ಚತುರ್ವೇದಿ ನ್ಯಾಯಪೀಠಕ್ಕೆ ತಿಳಿಸಿದರು.