ಮಂಗಳೂರು: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಬೈಕ್ನಲ್ಲಿ ಹಿಂಬಾಲಿಸಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರನ್ನು ಹಿಂಬಾಲಿಸಿದವರ ಹುಡುಕಾಟ ನಡೆಸಿದ್ದಾರೆ.
ಬುಧವಾರ ರಾತ್ರಿ 7.45ರ ಸುಮಾರಿಗೆ ಈ ಘಟನೆ ನಡೆದಿದೆ. ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಹೋಗಲು ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ದೇರಳಕಟ್ಟೆ-ನಂತೂರು ನಡುವೆ ಈ ಘಟನೆ ನಡೆದಿದೆ.
ಸುಮಾರು 10 ಕಿ.ಮೀ.ವರೆಗೂ ಖಾದರ್ ಅವರ ಕಾರನ್ನು ಅಪರಿಚಿತರು ಹಿಂಬಾಲಿಸಿದ್ದು, ಅನುಮಾನ ಬಂದು ಎಸ್ಕಾರ್ಟ್ ವಾಹನದ ಪೊಲೀಸರು ಬೈಕ್ ತಡೆದಿದ್ದಾರೆ. ತಕ್ಷಣ ಎಚ್ಚೆತ್ತ ಬೈಕ್ ಸವಾರರು ಬೈಕ್ ತಿರುಗಿಸಿ ಪರಾರಿಯಾಗಿದ್ದಾರೆ.
ಖಾದರ್ ಎಸ್ಕಾರ್ಟ್ ವಾಹನದ ಎಎಸ್ಐ ಸುಧೀರ್ ನೀಡಿರುವ ಮಾಹಿತಿಯಿಂದ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಬೈಕ್ ನಂಬರ್ ನೋಟ್ ಮಾಡಿಕೊಂಡು ವಿಳಾಸ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.