ಶಿವಮೊಗ್ಗ: ಎಂಟು ತಿಂಗಳಿನಿಂದ ರಾಜ್ಯದ ತೆರಿಗೆ ಸಂಗ್ರಹ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇಂತಹ ಸಂದಿಗ್ಧದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಶಕ್ತಿಮೀರಿ ಪ್ರಯತ್ನ ನಡೆಸುತ್ತಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿಕಾರಿಪುರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಕೇಂದ್ರದಿಂದ ಹೆಚ್ಚಿನ ಅನುದಾನ ಕೋರಲಾಗಿದೆ. ಪ್ರಧಾನಿ ಮೋದಿ ಅವರು ನೆರವು ನೀಡುವ ಭರವಸೆ ಇದೆ. ನಾಲ್ಕು ತಿಂಗಳಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದೆ ಎಂದರು.
ಕೊರೊನಾ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರಿಗೆ ಈಗಾಗಲೇ ಎರಡು ಪ್ಯಾಕೇಜ್ ಘೋಷಿಸಲಾಗಿದೆ. ಅನಿವಾರ್ಯವಾದರೆ ಮತ್ತೊಂದು ಪ್ಯಾಕೇಜ್ ನೀಡಲೂ ಸರ್ಕಾರ ಸಿದ್ಧವಿದೆ ಎಂದರು.
ನಾಳೆಯಿಂದ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ಬರಲಿದೆ. ಜನ ಸಂಖ್ಯೆಗೆ ಅನುಗುಣವಾಗಿ ಎಲ್ಲ ಜಿಲ್ಲೆಗಳಿಗೂ ಹಂಚಿಕೆ ಮಾಡಲಾಗುವುದು ಎಂದು ವಿವರ ನೀಡಿದರು.