ಚಿಕ್ಕಮಗಳೂರು: 2019–20ನೇ ಸಾಲಿನ ಅತಿಥಿ ಉಪನ್ಯಾಸಕರನ್ನೇ ಈ ಸಾಲಿಗೂ ಮುಂದುವರಿಸಲು ಕ್ರಮ ವಹಿಸುವಂತೆ ಉನ್ನತ ಶಿಕ್ಷಣ ಸಚಿವರು ಸೂಚನೆ ನೀಡಿದರೂ ಈವರೆಗೆ ಇಲಾಖೆಯಿಂದ ಆದೇಶ ಹೊರಬಿದ್ದಿಲ್ಲ.
ಉಪ ಮುಖ್ಯಮಂತ್ರಿಯೂ ಆಗಿರುವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ನವೆಂಬರ್ 11ರಂದು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಸೂಚನೆ ನೀಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳು, ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಳೆದ ಸಾಲಿನಲ್ಲಿ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ನವೆಂಬರ್ 17ರಿಂದಲೇ ಅನ್ವಯವಾಗುವಂತೆ ಹುದ್ದೆಯಲ್ಲಿ ಮುಂದುವರಿಸುವಂತೆ ತಿಳಿಸಿದ್ದಾರೆ.
ಪದವಿ, ಸ್ನಾತಕೋತ್ತರ ಪದವಿ ಅಂತಿಮ ವರ್ಷದ ತರಗತಿಗಳು (ಆಫ್ಲೈನ್) ನ.17ರಿಂದ ಶುರುವಾಗಿವೆ. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ.
‘ಪದವಿ, ಸ್ನಾತಕೋತ್ತರ ಪದವಿ ವಿದ್ಯಾಲಯಗಳಲ್ಲಿ ಸುಮಾರು 15 ಸಾವಿರ ಅತಿಥಿ ಉಪನ್ಯಾಸಕರು ಇದ್ದಾರೆ. ಅತಿಥಿ ಉಪನ್ಯಾಸಕರನ್ನು ಮುಂದುವರಿಸಲು ಸರ್ಕಾರ ತಕ್ಷಣಕ್ರಮ ವಹಿಸಬೇಕು’ ಎಂದು ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಕೆ.ಪರ್ವತೇಗೌಡ ಅವರು ಮನವಿ ಮಾಡಿದ್ದಾರೆ.
**
ತರಗತಿಗಳಿಗೆ ಈಗ ಎಷ್ಟು ವಿದ್ಯಾರ್ಥಿಗಳು ಹಾಜರಾಗು ತ್ತಿದ್ದಾರೆ ಎಂಬ ಮಾಹಿತಿ ಕ್ರೋಢೀಕರಿ ಸುತ್ತಿದ್ದು, ಅಗತ್ಯಕ್ಕನುಗುಣವಾಗಿ ನವೀಕರಣಕ್ಕೆ ಕ್ರಮ ವಹಿಸುತ್ತೇವೆ. –ಜಿ.ಕುಮಾರ ನಾಯಕ್,ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ