ಹುಬ್ಬಳ್ಳಿ: ಹೈಸ್ಕೂಲ್ನಿಂದಲೇ ತಾಂತ್ರಿಕ ಶಿಕ್ಷಣ ನೀಡಬೇಕು. ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಯಾಂಡ್ ಬೆಂಗಳೂರು 'ಇನ್ನೋವೇಷನ್ ಆ್ಯಂಡ್ ಇಂಪ್ಯಾಕ್ಟ್ ಹುಬ್ಬಳ್ಳಿ' ಕಾರ್ಯಕ್ರಮವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.
1960ರಲ್ಲಿಯೇ ಹುಬ್ಬಳ್ಳಿಯಲ್ಲಿ ತಾಂತ್ರಿಕ ಹೈಸ್ಕೂಲ್ ಇತ್ತು. ಮಕ್ಕಳಲ್ಲಿ ಗ್ರಹಿಕೆ ಶಕ್ತಿ ಚೆನ್ನಾಗಿರುತ್ತದೆ. ಆದ್ದರಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಒಂದೂವರೆ ವರ್ಷದಲ್ಲಿ 150 ಐಟಿಐ ಕಾಲೇಜುಗಳನ್ನು ಉನ್ನತ ದರ್ಜೆಗೆ ಏರಿಸಲಾಗಿದೆ. ಪಾಲಿಟೆಕ್ನಿಕ್ ಕಾಲೇಜುಗಳನ್ನು ಉನ್ನತ ದರ್ಜೆಗೆ ಏರಿಸುವ ಕೆಲಸ ಆಗಬೇಕು ಎಂದು ಹೇಳಿದರು.
ಅಟಲ್ ಟಿಂಕರಿಂಗ್ ಪ್ರಯೋಗಾಲಯಗಳನ್ನು ಉನ್ನತ ದರ್ಜೆಗೆ ಏರಿಸುವ ಮೂಲಕ ಮಕ್ಕಳಲ್ಲಿ ಸಂಶೋಧನಾ ಮನೋಭಾವ ಬೆಳೆಸಬೇಕು ಎಂದರು.
ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿವೆ. ಅವರಿಗೆ ಅವಕಾಶ ಕಲ್ಪಿಸಬೇಕಿದೆ. ಬೆಂಗಳೂರು, ಪುಣೆ ಮುಂತಾದೆಡೆ ಆಗಿರುವ ಐಟಿ, ಬಿಟಿ ಕ್ರಾಂತಿಯಲ್ಲಿ ಉತ್ತರ ಕರ್ನಾಟಕದ ಪ್ರತಿಭೆಗಳ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ ಎಂದರು.