ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನದ ಮೂಲಕ ಮನೆ ಬಾಗಿಲಿಗೇ ಆಡಳಿತ: ಸಚಿವ ಅಶ್ವತ್ಥನಾರಾಯಣ

Last Updated 25 ಡಿಸೆಂಬರ್ 2021, 11:11 IST
ಅಕ್ಷರ ಗಾತ್ರ

ಬೆಂಗಳೂರು: ‘ಅಟಲ್ ಬಿಹಾರಿ ವಾಜಪೇಯಿಯವರ ಆಶಯದಂತೆ ರಾಜ್ಯದಲ್ಲಿ ಆಧುನಿಕ ತಂತ್ರಜ್ಞಾನಗಳ ಮೂಲಕ ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸಲಾಗುತ್ತಿದೆ.ತಂತ್ರಜ್ಞಾನದ ಮೂಲಕ ಸೇವೆಗಳನ್ನು ಜನರ ಬಳಿಗೆ ಕೊಂಡೊಯ್ಯುವುದೇ ಉತ್ತಮ ಆಡಳಿತದ ಲಕ್ಷಣ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ವಾಜಪೇಯಿಯವರ 97ನೇ ಜನ್ಮದಿನದ ಅಂಗವಾಗಿ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ‘ಉತ್ತಮ ಆಡಳಿತ ದಿವಸ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬೆಂಗಳೂರಿನಲ್ಲಿರುವ ಯುವಿಇಸಿ ಕಾಲೇಜನ್ನು ‘ಯೂನಿವರ್ಸಿಟಿ ಆಫ್ ಎಮಿನೆನ್ಸ್’ ಮಟ್ಟಕ್ಕೆ ಉನ್ನತೀಕರಿಸಲಾಗುತ್ತಿದೆ. ಇದು ವಾಜಪೇಯಿಯವರು ಕಂಡಂಥ ಕನಸಿಗೆ ಪೂರಕವಾಗಿದೆ. ಹಾಗೆಯೇ ಪ್ರತಿಯೊಂದು ಜಿಲ್ಲೆಯಲ್ಲೂ ಕನಿಷ್ಠ ಒಂದಾದರೂ ವಿಶ್ವವಿದ್ಯಾಲಯ ಇರುವಂತೆ ನೋಡಿಕೊಳ್ಳಲಾಗುತ್ತಿದೆ’ ಎಂದು ಅವರು ಹೇಳಿದರು.

‘ಉನ್ನತ ಶಿಕ್ಷಣವನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಸಿಗುವಂತೆ ಮಾಡಲಾಗಿದೆ. ಇನ್ನೊಂದೆಡೆ, ಇದೇ ತಂತ್ರಜ್ಞಾನವನ್ನು ಬಳಸಿಕೊಂಡು ಕೌಶಲಗಳನ್ನು ಕಲಿಸಲಾಗುತ್ತಿದೆ. ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಅತ್ಯುತ್ತಮ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ವಿವರಿಸಿದರು.

‘ಭಾರತದಲ್ಲಿ ಆಗಿರುವಷ್ಟು ಡಿಜಿಟಲೀಕರಣ ಮುಂದುವರಿದ ದೇಶಗಳಲ್ಲೂ ಆಗಿಲ್ಲ. ವಿಶಿಷ್ಟ ಗುರುತಿನ ಪ್ರಾಧಿಕಾರವು ತಂತ್ರಜ್ಞಾನವನ್ನು ಬಳಸಿಕೊಂಡು ಜನರ ಖಾತೆಗಳಿಗೆ ನೇರವಾಗಿ ಅನುಕೂಲಗಳನ್ನು ತಲುಪಿಸುತ್ತಿದೆ. ಬ್ಯಾಂಕ್ ಖಾತೆ ತೆಗೆಯುವುದರಿಂದ ಹಿಡಿದು ಅಡುಗೆ ಅನಿಲ ಪೂರೈಕೆವರೆಗೆ ಇವತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದ್ದು, ಇದು ಉತ್ತಮ ಆಡಳಿತದ ಹೆಗ್ಗುರುತು’ ಎಂದು ಪ್ರತಿಪಾದಿಸಿದರು.

‘ವಾಜಪೇಯಿಯವರ ಪರಿಕಲ್ಪನೆಗಳಾದ ಗ್ರಾಮ ಸಡಕ್‌ನಿಂದ ಹಿಡಿದು ನದಿ ಜೋಡಣೆಯವರೆಗೆ ಹತ್ತು ಹಲವು ಸಂಗತಿಗಳು ಇಂದು ದೇಶವನ್ನು ಮುನ್ನಡೆಸುತ್ತಿವೆ. ಮೋದಿ ಕೂಡ ನೂರಾರು ಅಪ್ರಸ್ತುತ ಕಾನೂನುಗಳನ್ನು ರದ್ದುಪಡಿಸಿದ್ದು, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತಂದಿದ್ದಾರೆ’ ಎಂದರು.

ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ, ಜೀವನೋಪಾಯ ಮತ್ತು ವಿದ್ಯುನ್ಮಾನ, ಐಟಿ ಹಾಗೂ ಬಿಟಿ ಇಲಾಖೆಗಳು ಜನಪರ ಉಪಕ್ರಮಗಳು ಮತ್ತು ರೂಪಿಸಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದವು.

ಹಿರಿಯ ವಿಜ್ಞಾನಿ ವಾಸುದೇವ ಅತ್ರೆ, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ಎನ್ಎಲ್ಎಂ ನಿರ್ದೇಶಕಿ ಮಂಜುಶ್ರೀ, ಐಟಿ-ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್, ಜಿಟಿಟಿಸಿ ಮುಖ್ಯಸ್ಥ ರಾಘವೇಂದ್ರ ರಾವ್, ಕೆಎಸ್ಡಿಸಿ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಇದ್ದರು.

ಬಂದ್ ಆಚರಣೆ ಬೇಡ: ‘ಬೆಳಗಾವಿ ವಿಚಾರದಲ್ಲಿ ಉದ್ಧಟತನ ತೋರಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ವತಃ ಮುಖ್ಯಮಂತ್ರಿ ಸದನದಲ್ಲೇ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿ. 31ರ ‘ಕರ್ನಾಟಕ ಬಂದ್’ ಹಿಂತೆಗೆದುಕೊಳ್ಳಬೇಕು’ ಎಂದು ಅಶ್ವತ್ಥನಾರಾಯಣ ಮನವಿ ಮಾಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದ ನೆಲ, ಜಲ ಮತ್ತು ನುಡಿಯ ವಿಚಾರಗಳಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಕನ್ನಡಪರ ಸಂಘಟನೆಗಳ ಸಲಹೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ’ ಎಂದರು.

’ಬಂದ್ ಆಚರಣೆಯಿಂದ ಜನರಿಗೆ ತೊಂದರೆಯಾಗುತ್ತದೆ. ಜತೆಗೆ ಆರ್ಥಿಕ ಚಟುವಟಿಕೆಗೆ ಧಕ್ಕೆಯಾಗಲಿದೆ. ಕನ್ನಡಪರ ಸಂಘಟನೆಗಳ ಜತೆಗೆ ಮಾತುಕತೆಗೆ ಸರ್ಕಾರ ಸಿದ್ಧವಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT