ಚಾಮರಾಜನಗರ: 'ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಇನ್ನೂ ಎರಡೂವರೆ ವರ್ಷಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಇದನ್ನೇ ಸ್ಪಷ್ಟಪಡಿಸಿದ್ದಾರೆ' ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಸತ್ಯಕ್ಕೆ ದೂರವಾದ ವಿಚಾರ ಎಂದರು.
ಹೈಕಮಾಂಡ್ ಸೂಚಿಸಿದರೆ ನೀವು ಮುಖ್ಯಮಂತ್ರಿಯಾಗಲು ಸಿದ್ಧರಿದ್ದೀರಾ ಎಂದು ಕೇಳಿದ್ದಕ್ಕೆ, 'ಅರುಣ್ ಸಿಂಗ್ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಇಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ' ಎಂದರು.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ರೇಣುಕಾಚಾರ್ಯ ನಡುವಿನ ವಾಗ್ವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಆ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಬಗೆಹರಿಸುತ್ತಾರೆ' ಎಂದರು.
ಹಿಂಜರಿಕೆ ಇಲ್ಲ: 'ಚಾಮರಾಜನಗರಕ್ಕೆ ಬರಲು ನನಗೆ ಹಿಂಜರಿಕೆ ಇಲ್ಲ. ಸ್ಪೀಕರ್ ಆಗಿದ್ದಾಗ, ಸಿಎಂ ಆಗಿದ್ದಾಗ, ಬಂದಿದ್ದೇನೆ. ಈಗ ಕೈಗಾರಿಕಾ ಸಚಿವನಾಗಿ ಬಂದಿದ್ದೇನೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.