ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಾಯದ ಬಂದ್‌ಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌

ಹೊಸ ವರ್ಷಾಚರಣೆ: ನಿಷೇಧಾಜ್ಞೆ ಉಲ್ಲಂಘಿಸುವಂತಿಲ್ಲ
Last Updated 25 ಡಿಸೆಂಬರ್ 2021, 20:17 IST
ಅಕ್ಷರ ಗಾತ್ರ

ಬೆಂಗಳೂರು: ‘ಒತ್ತಾಯದ ಬಂದ್‌ಗೆ ನಾವು ಅವಕಾಶ ನೀಡುವುದಿಲ್ಲ’ ಎಂದು ಬೆಂಗಳೂರು ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ ಯಾರೊಬ್ಬರೂ ನಮ್ಮನ್ನು ಸಂಪರ್ಕಿಸಿಲ್ಲ. ನಾಗರಿಕರು ಸ್ವ ಇಚ್ಛೆಯಿಂದ ಬಂದ್‌ಗೆ ಸಹಕರಿಸಿದರೆ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಬಲವಂತಪಡಿಸಿದರೆ, ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯ. ಇದಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತದೆ’ ಎಂದರು.

‘ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ. ಸರ್ಕಾರದ ಆದೇಶದಲ್ಲೇ ಇದನ್ನು ಸ್ಪಷ್ಟಪಡಿಸಲಾಗಿದೆ. ಪಬ್‌ ಹಾಗೂ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ 50 ರಷ್ಟು ಮಂದಿಗೆ ಅವಕಾಶವಿದೆ. ಅಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಹೋದ ವರ್ಷದ ಹಾಗೆ ಅದಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ. ಕೆಲ ಷರತ್ತುಗಳನ್ನೂ ವಿಧಿಸಲಾಗುತ್ತದೆ. ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗುತ್ತದೆ’ ಎಂದು ಹೇಳಿದರು.

‘ಹೋಟೆಲ್‌, ಪಬ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಲ್ಲಿ ನಿಗದಿಯಾಗಿರುವ ಪಾರ್ಟಿಗಳಲ್ಲಿ ಪಾಲ್ಗೊಳ್ಳಲು ಮುಂಗಡ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ಅವರು ಅಗತ್ಯ ದಾಖಲೆಗಳನ್ನು ತೋರಿಸಬೇಕಾಗುತ್ತದೆ. ನಮ್ಮ ಅಧಿಕಾರಿಗಳು ಈಗಾಗಲೇ ಕ್ಲಬ್‌ ಹಾಗೂ ಪಬ್‌ ಮಾಲೀಕರ ಜೊತೆ ಮಾತುಕತೆ ನಡೆಸಿದ್ದಾರೆ.

ಸೋಮವಾರ ಅಥವಾ ಮಂಗಳವಾರ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ’ ಎಂದು ವಿವರಿಸಿದರು.

‘ಗುರುತಿನ ಚೀಟಿ ಹೊಂದಿರುವುದು ಕಡ್ಡಾಯ’
‘ಚರ್ಚ್‌ಸ್ಟ್ರೀಟ್‌ ಹಾಗೂ ಬ್ರಿಗೇಡ್‌ ರಸ್ತೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಇರಲಿದೆ. ಬೇರೆ ಊರುಗಳಿಗೆ ಹೋಗುವ ಸಲುವಾಗಿ ವಿಮಾನ ನಿಲ್ದಾಣ, ರೈಲ್ವೆ ಹಾಗೂ ಬಸ್‌ ನಿಲ್ದಾಣಗಳಿಗೆ ಬರುವವರು ಅಗತ್ಯ ದಾಖಲೆಗಳನ್ನು ತೋರಿಸಬೇಕಾಗುತ್ತದೆ. ಕಚೇರಿಗಳಿಗೆ ಹೋಗುವವರೂ ಗುರುತಿನ ಚೀಟಿ ತೋರಿಸಬೇಕು’ ಎಂದು ಕಮಲಪಂತ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT