ದಾವಣಗೆರೆ: ‘ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕ ಕಡಿಮೆ ಇದ್ದರೂ, ಖಾಸಗಿ ಕಾಲೇಜುಗಳಲ್ಲಿ ಅಧಿಕ ಶುಲ್ಕ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಹಾಗಾಗಿ ನಮ್ಮಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಕಡಿಮೆ ಮಾಡಲು ಚಿಂತನೆ ನಡೆಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಶೇ 95 ರಷ್ಟು ಅಂಕ ಗಳಿಸಿದರೂ ನೀಟ್ ನಲ್ಲಿ ಉತ್ತೀರ್ಣರಾಗುತ್ತಿಲ್ಲ. ಮ್ಯಾನೇಜ್ಮೆಂಟ್ ಸೀಟು ಪಡೆಯಲು ದುಬಾರಿ ಹಣ ಕಟ್ಟಬೇಕಾಗುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಪರ್ಯಾಯ ಮಾರ್ಗ ಕಂಡುಕೊಂಡು ಬೇರೆ ಬೇರೆ ದೇಶಗಳಿಗೆ ಕಲಿಯಲು ಹೋಗುತ್ತಿದ್ದಾರೆ’ ಎಂದು ಹೇಳಿದರು.
‘ನ್ಯಾಷನಲ್ ಮೆಡಿಕಲ್ ಕೌನ್ಸಿಲ್ (ಎನ್ಎಂಸಿ) ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಎನ್ಎಂಸಿ ಕೂಡ ಈ ನಿಟ್ಟಿನಲ್ಲಿ ಪುನರ್ ಪರಿಶೀಲನೆ ನಡೆಸುತ್ತಿದೆ. ವೈದ್ಯಕೀಯ ಕಾಲೇಜುಗಳನ್ನು ಎ, ಬಿ, ಸಿ ಎಂದು ಕೆಟಗರಿ ಮಾಡಿ ಶುಲ್ಕ ನಿಗದಿ ಮಾಡಬೇಕಾಗುತ್ತದೆ’ ಎಂದು ಮಾಹಿತಿ ನೀಡಿದರು.
ಉಕ್ರೇನ್ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿರುವುದರಿಂದ ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಇಲ್ಲಿನ ವೈದ್ಯಕೀಯ ಶಿಕ್ಷಣದ ಪಠ್ಯಕ್ರಮ ಮತ್ತು ಉಕ್ರೇನ್ನ ಪಠ್ಯಕ್ರಮ ಒಂದೇ ಅಲ್ಲ. ಕೋರ್ಸ್ಗಳು ಬೇರೆ ಬೇರೆ ಇವೆ. ಹಾಗಾಗಿ ಅಲ್ಲಿ ಶಿಕ್ಷಣ ಪೂರ್ಣಗೊಳಿಸಿದರೂ ಇಲ್ಲಿ ಮತ್ತೆ ಪರೀಕ್ಷೆ ಬರೆಯಬೇಕಾಗುತ್ತದೆ. ಈ ಎಲ್ಲದರ ಬಗ್ಗೆ ಕೇಂದ್ರ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದರು.