ಮೈಸೂರು: ನಂಜನಗೂಡು ತಾಲ್ಲೂಕಿನ ಪ್ರಭಾರ ಆರೋಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆ ಸೋಮವಾರ ಆರಂಭವಾಗಿದೆ.
ರಾಜ್ಯ ಸರ್ಕಾರ, ತನಿಖೆಗೆ ಅಧಿಕೃತ ಆದೇಶ ಪ್ರಕಟಿಸಿದೆ. ಆದೇಶಪತ್ರ ತಮ್ಮ ಕೈಸೇರುತ್ತಿದ್ದಂತೆಯೇ, ಮೈಸೂರು ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ತನಿಖೆ ಆರಂಭಿಸಿದ್ದಾರೆ.
‘ಏಳು ದಿನಗಳ ಒಳಗೆ ಸಮಗ್ರ ಮಾಹಿತಿ ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಯತ್ನಿಸುವೆ. ಯಾವ ದಿಕ್ಕಿನಲ್ಲಿ ತನಿಖೆ ನಡೆಯಲಿದೆ ಎಂಬುದನ್ನು ಹೇಳಲಾಗದು. ಅಗತ್ಯ ಬಿದ್ದಾಗ ಸ್ಥಳೀಯ ಅಧಿಕಾರಿಗಳನ್ನು ನೆರವಿಗೆ ಬಳಸಿಕೊಳ್ಳುವೆ’ ಎಂದು ಜಿ.ಸಿ.ಪ್ರಕಾಶ್ ‘ಪ್ರಜಾವಾಣಿ’ಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವರ್ಗಾವಣೆ ಹಿಂಪಡೆಯಬೇಕು ಎಂದು ಆಗ್ರಹಿಸಿ,ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರಾದೇಶಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.