ಬೆಂಗಳೂರು: ‘ಕೇಂದ್ರದಲ್ಲಿ ಮಾಜಿ ಸಚಿವರಾಗಿದ್ದ ಹಾಗೂ ಮುಖ್ಯಮಂತ್ರಿ ಆಗಲು ಬಯಸುತ್ತಿರುವವರು ಅವರ ಪಕ್ಷದವರು ಕಾಂಗ್ರೆಸ್ ಜತೆ ಸಂಪರ್ಕದಲ್ಲಿದ್ದಾರೆಂದು ಹೇಳಿರುವಾಗ ನಾನು ಏನನ್ನೂ ಹೇಳುವ ಅಗತ್ಯವಿಲ್ಲ. ಸಮಯವೇ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯ ವ್ಯವಹಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದರು.
‘ಈಗಿನ ಸರ್ಕಾರದ ಆಡಳಿತದಲ್ಲಿ ರಾಜ್ಯ 20 ವರ್ಷ ಹಿಂದಕ್ಕೆ ಹೋಗಿದೆ. ಉತ್ತಮ ಆಡಳಿತ ನೀಡಲು ಅವರಿಂದ ಸಾಧ್ಯವಾಗಿಲ್ಲ. ರಾಜ್ಯದ ಜನರ ಹಿತದ ಬಗ್ಗೆ ನಾವು ಚಿಂತನೆ ನಡೆಸಿದ್ದು, ಜನರಿಗೆ ಬದಲಾವಣೆ ಹಾಗೂ ಉತ್ತಮ ಆಡಳಿತದ ಬಗ್ಗೆ ಅರಿವು ಮೂಡಿಸುವತ್ತ ಗಮನಹರಿಸುತ್ತಿದ್ದೇವೆ' ಎಂದರು.