ಬೆಂಗಳೂರು: ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿ ಸರ್ಕಾರ ಅ.8ರಂದು ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ತಡೆ ನೀಡಿದೆ.
‘ರೋಸ್ಟರ್ ನಿಯಮಗಳನ್ನು ಪಾಲಿಸಿಲ್ಲ. ಆಡಳಿತ ಪಕ್ಷಗಳ ಅಭ್ಯರ್ಥಿಗಳಿಗೆ ಅನುಕೂಲ ಆಗುವಂತೆ ಮೀಸಲಾತಿ ನಿಗದಿಪಡಿಸಲಾಗಿದೆ’ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ, ತಡೆಯಾಜ್ಞೆ ನೀಡಿತು.
ಅರ್ಜಿಗಳು ವಿಚಾರಣೆಗೆ ಅರ್ಹವಾಗಿಲ್ಲ ಎಂದು ಅಡ್ವೊಕೇಟ್ ಜನರಲ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ‘ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗಳನ್ನೂ ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾಗಿರುವ ಕಾರಣ ಈ ಅರ್ಜಿಗಳನ್ನು ಶೀಘ್ರವೇ ವಿಚಾರಣೆಗೆ ಪರಿಗಣಿಸಲಾಗುವುದು’ ಎಂದು ಪೀಠ ತಿಳಿಸಿತು.
ಈಗಾಗಲೇ ಚುನಾವಣೆ ನಡೆಸಿದ್ದರೆ ಅವುಗಳ ಫಲಿತಾಂಶವು ಈ ಅರ್ಜಿಗಳ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಪೀಠ ಸ್ಪಷ್ಟಪಡಿಸಿತು. ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು ಜಿಲ್ಲೆಗಳಿಂದ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಪೀಠ ವಿಚಾರಣೆ ನಡೆಸಿತು.