ಬೆಂಗಳೂರು: ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
‘ರಾಜ್ಯ ಸಚಿವ ಸಂಪುಟದ ಮುಂದೆ ಈ ಸಂಬಂಧ ಪ್ರಸ್ತಾವ ಸದ್ಯದಲ್ಲೇ ಮಂಡನೆಯಾಗಲಿದೆ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ನ್ಯಾಯಾಲಯಕ್ಕೆ ತಿಳಿಸಿದರು.
ತೃತೀಯ ಲಿಂಗಿಗಳ ಪರ ಹೋರಾಟಗಾರ ಸಂಗಮ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಪಡೆಯುವುದು ತೃತೀಯ ಲಿಂಗಿಗಳ ಮೂಲಭೂತ ಹಕ್ಕು’ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದನ್ನು ಉಲ್ಲಂಘಿಸಿ ಪೊಲೀಸ್ ಇಲಾಖೆ 2,467 ಸಿಬ್ಬಂದಿ ನೇಮಕಕ್ಕೆ ಮುಂದಾಗಿದೆ. ಪುರುಷ ಮತ್ತು ಮಹಿಳೆಯರಿಗಷ್ಟೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದರು.