ಚಂಡಮಾರುತದಿಂದ ಗಾಳಿ, ಮಳೆ ಹಾಗೂ ಸಮುದ್ರ ಪ್ರಕ್ಷುಬ್ಧಗೊಳ್ಳುವ ಕುರಿತು ಮೇ 13ರಂದೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ತಕ್ಷಣವೇ ಎಲ್ಲ ದೋಣಿಗಳು, ಹಡಗು ಮತ್ತು ಸಣ್ಣ ನೌಕೆಗಳನ್ನು ಸಮುದ್ರಕ್ಕೆ ಇಳಿಸದಂತೆ ಭಾರತೀಯ ಕೋಸ್ಟ್ ಗಾರ್ಡ್ ಎಚ್ಚರಿಕೆ ನೀಡಿತ್ತು. ಅವೆಲ್ಲವನ್ನೂ ಮೀರಿ ಎರಡು ಟಗ್ಗಳು ಹೇಗೆ ಸಮುದ್ರದಲ್ಲಿ ಸಿಲುಕಿದವು? ದುರಂತಕ್ಕೆ ಕಾರಣಗಳೇನು ಎಂಬುದರ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.