ಬೆಂಗಳೂರು: ಮೀಸಲಾತಿ ಹೆಚ್ಚಿಸುವ ಸಂಬಂಧ ಅಧಿಕೃತ ಆದೇಶದ ಪ್ರತಿ ಸಿಕ್ಕಿದ ಬಳಿಕವೇ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸ್ಥಗಿತಗೊಳಿಸಲು ಪರಿಶಿಷ್ಟ ಜಾತಿ (ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ನಿರ್ಧರಿಸಿದೆ.
‘ಮೀಸಲಾತಿ ಪ್ರಮಾಣ ಹೆಚ್ಚಿಸಲು ನಿರ್ಧರಿಸಿರುವುದು ಸಂತಸ ತಂದಿದೆ. ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದೆಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ. ಆದರೆ, ಆದೇಶ ಸಿಕ್ಕಿದ ಬಳಿಕವಷ್ಟೇ ಪ್ರತಿಭಟನೆ ಕೈಬಿಡಲು ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸಮಿತಿ ಸಂಚಾಲಕ ಬಸವರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯು 246 ದಿನ ಪೂರೈಸಿದೆ’ ಎಂದು ಮಾಹಿತಿ ನೀಡಿದರು.