ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಹಿರಿಯ ಪ್ರಚಾರಕ ಆಗಿದ್ದ ಚಂದ್ರಶೇಖರ್ ಭಂಡಾರಿ (87) ಅವರು ಭಾನುವಾರ ಮಧ್ಯಾಹ್ನ ನಿಧನರಾದರು.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತರಾಗಿದ್ದಾರೆ ಎಂದು ಆರ್ಎಸ್ಎಸ್ ಪ್ರಕಟಣೆ ತಿಳಿಸಿದೆ.
ಕೇಶವ ಕೃಪಾದಲ್ಲಿ ಸೋಮವಾರ ಬೆಳಿಗ್ಗೆ 8 ರಿಂದ 9ರವರೆಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬನಶಂಕರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಕ್ಷೇತ್ರೀಯ ಸಂಚಾಲಕ ವಿ.ನಾಗರಾಜ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರುಚಂದ್ರಶೇಖರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಚಂದ್ರಶೇಖರ್ ಭಂಡಾರಿ ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷತ್, ವಿಶ್ವ ಸಂವಾದ ಕೇಂದ್ರ ಸಂಸ್ಥೆಗಳಲ್ಲಿಯೂ ಕಾರ್ಯನಿರ್ವಹಿಸಿದ್ದರು.