ಬೆಂಗಳೂರು: ಬೆಳಗಾವಿಯಿಂದ ವಿಧಾನಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸಿರುವ ಲಖನ್ ಜಾರಕಿಹೊಳಿಯಿಂದ ಬಿಜೆಪಿ ಅಭ್ಯರ್ಥಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಲಖನ್ ಬಿಜೆಪಿ ಪಕ್ಷದ ಸದಸ್ಯರಲ್ಲ. ಆದರೂ, ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಜತೆ ಈ ಬಗ್ಗೆ ಚರ್ಚಿಸುವುದಾಗಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ರಮೇಶ ಮತ್ತು ಬಾಲಚಂದ್ರ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮಅಭ್ಯರ್ಥಿಯೇ ಗೆಲ್ಲುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆಯಲ್ಲಿ ಎ. ಮಂಜು ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಪ್ರಶ್ನಿಸಿದಾಗ, ಆ ಪ್ರಕರಣವೇ ಬೇರೆ. ಲಖನ್ ಯಾವುದೇ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ ಎಂದು ಹೇಳಿದರು.