ಬೆಂಗಳೂರು:ಕೃಷ್ಣಾ ಮೇಲ್ದಂಡೆ ಯೋಜನೆ, ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳನ್ನು ಕರ್ನಾಟಕದ ಪರವಾಗಿ ರೂಪಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಜ್ಯದಾದ್ಯಂತ ಪಾದಯಾತ್ರೆ ನಡೆಯಲಿದೆ.
'ನದಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್ ಈ ನಿಟ್ಟಿನಲ್ಲಿ ಹೋರಾಟ ನಡೆಸಲಿದೆ. ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯದಾದ್ಯಂತ ಪಾದಯಾತ್ರೆ ನಡೆಯಲಿದೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
'ಪಕ್ಷದ ಸ್ಥಳೀಯ ಮುಖಂಡರು ಒಂದೊಂದು ತಂಡವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಸಮಾವೇಶಗಳಲ್ಲಿ ನಾನು ಪಾಲ್ಗೊಳ್ಳುತ್ತೇನೆ' ಎಂದರು.
'ಅನೇಕ ಮಹತ್ವದ ವಿಚಾರಗಳಿದ್ದರೂ ಸಂಸತ್ ಅಧಿವೇಶನದಲ್ಲಿ ಮಾತನಾಡಲು ಅವಕಾಶ ಸಿಗಲಿಲ್ಲ. ಮುಂದಿನ ಚಳಿಗಾಲದ ಅಧಿವೇಶನದವರೆಗೂ ನಾನು ಕಾಯುತ್ತಾ ಕೂರುವುದಿಲ್ಲ. ಪಕ್ಷ ಸಂಘಟನೆಗೆ ಆದ್ಯತೆ ನೀಡುತ್ತೇನೆ' ಎಂದೂ ಹೇಳಿದರು.