ಬೆಂಗಳೂರು: ಮುಂದಿನ ಅಸೆಂಬ್ಲಿ ಚುನಾವಣೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹಾಗೂ ಹಿರಿಯ ಶಾಸಕ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿಎದುರಿಸಿ 150 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದರು.
ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷದೊಳಗೆ ಅಥವಾ ಸರಕಾರದಲ್ಲಿ ನಾಯಕತ್ವದ ಗೊಂದಲ ಇಲ್ಲ. ನಾಯಕತ್ವ ಬದಲಾವಣೆ ಕುರಿತು ಯಾರಿಗಾದರೂ ಭ್ರಮೆ ಇದ್ದರೆ, ಆ ಭ್ರಮೆಯಲ್ಲಿ ತೇಲಾಡುತ್ತಿದ್ದರೆ, ಭ್ರಮೆಯ ಆಸೆ ಮತ್ತು ಹುಚ್ಚಿನಲ್ಲಿದ್ದರೆ ಅದನ್ನು ಬಿಟ್ಟು ಬಿಡುವುದು ಒಳ್ಳೆಯದು ಎಂದರು.
ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲೇ ಮುಂದಿನ ಚುನಾವಣೆ ನಡೆಯಲಿದೆ. ಅವರೇ ಪ್ರಮುಖರಾಗಿರುತ್ತಾರೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರಶ್ನಿಸಿದಾಗ, ‘ನಿಮಗೆ ಭಾರೀ ಅತುರ ಇದ್ದರೆ ತೆಗೆದುಬಿಡಿ’ ಎಂದು ನಗುತ್ತಲೇ ಉತ್ತರಿಸಿ ಪತ್ರಕರ್ತರನ್ನೂ ನಗುವಿನ ಅಲೆಯಲ್ಲಿ ತೇಲಿಸಿದರು.