ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರ (ಜೂನ್ 21) ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ. ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕರ್ಫ್ಯೂ ಅವಧಿಯಲ್ಲಿ ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಕಾರಣವಿಲ್ಲದೇ ಸಂಚರಿಸಿದರೆ ಅಂಥವರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಲಿದ್ದಾರೆ.
‘ವಾರಾಂತ್ಯದಲ್ಲಿ ಹೆಚ್ಚು ಜನ ಓಡಾಡುವ ಸಂಭವವಿದೆ. ಹೀಗಾಗಿ, ಕರ್ಫ್ಯೂ ಜಾರಿ ಮಾಡಲಾಗಿದೆ. ಹಾಲು, ತರಕಾರಿ, ಹಣ್ಣು, ಮಾಂಸ ಖರೀದಿಗೆ ಯಾವುದೇ ಅಡ್ಡಿ ಇರುವುದಿಲ್ಲ. ವಾಯು ವಿಹಾರ, ಆಟೊ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ' ಎಂದು ಪೊಲೀಸ್ ಅಧಿಕಾರಿ ಹೇಳಿದರು.
'ಲಾಕ್ಡೌನ್ ಸಡಿಲಿಕೆಯಿಂದಾಗಿ ನಗರದ ಹಲವೆಡೆ ಜನಸಂದಣಿ ಇತ್ತು. ವಾರಾಂತ್ಯದಲ್ಲಿ ಅದಕ್ಕೆ ಅವಕಾಶವಿಲ್ಲ. ನಗರದ ಪ್ರತಿಯೊಂದು ಮೇಲ್ಸೇತುವೆಗಳನ್ನು ಬಂದ್ ಮಾಡಲಾಗಿದೆ. ಪ್ರತಿಯೊಂದು ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಸಿಬ್ಬಂದಿ ವಾಹನಗಳನ್ನು ತಪಾಸಣೆ ಮಾಡಲಿದ್ದಾರೆ’ ಎಂದು ಅವರು ತಿಳಿಸಿದರು.
‘ಯಾರಾದರೂ ನಿಯಮ ಉಲ್ಲಂಘಿಸಿದರೆ ಅಂಥವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು. ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸಲಾಗುವುದು’ ಎಂದೂ ಹೇಳಿದರು.