ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯ: ಕಸ್ತೂರಿರಂಗನ್ ವರದಿಗೆ ಸರ್ಕಾರದ ವಿರೋಧ

ವಾಸ್ತವಕ್ಕೆ ದೂರವಾದ ವರದಿ ಅನುಷ್ಠಾನ ಬೇಡ: ಬೊಮ್ಮಾಯಿ
Last Updated 4 ಡಿಸೆಂಬರ್ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: ಪಶ್ಚಿಮಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಸಂಬಂಧಿಸಿದ ಡಾ.ಕೆ.ಕಸ್ತೂರಿರಂಗನ್‌ ವರದಿಯ ಅನುಷ್ಠಾನವನ್ನು ರಾಜ್ಯ ಸರ್ಕಾರ ಮತ್ತೆ ವಿರೋಧಿಸಿದೆ. ಈ ವರದಿಯನ್ನು ತಿರಸ್ಕರಿಸಬೇಕು ಎಂಬ ಬೇಡಿಕೆಯನ್ನು ರಾಜ್ಯ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಮುಂದಿಟ್ಟಿದೆ.

ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದರ್‌ ಯಾದವ್‌, ಕಸ್ತೂರಿರಂಗನ್‌ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶನಿವಾರ ವರ್ಚುವಲ್‌ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪರಿಸರ ಸಚಿವ ಆನಂದ್‌ ಸಿಂಗ್‌, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ಅವರಿದ್ದ ನಿಯೋಗ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ನೀಡಿ, ರಾಜ್ಯದ ಅಹವಾಲನ್ನೂ ಸಲ್ಲಿಸಿತು.

‘ಉಪಗ್ರಹ ಚಿತ್ರಗಳ ಆಧಾರದ ಮೇಲೆ ಕಸ್ತೂರಿರಂಗನ್‌ ವರದಿ ಸಿದ್ಧಪಡಿಸಲಾಗಿದೆ. ಅದು ವಾಸ್ತವಿಕತೆಗೆ ದೂರವಾಗಿದೆ. ಈ ವರದಿ ಆಧಾರದಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು ಘೋಷಿಸಿದರೆ ಪಶ್ಚಿಮ ಘಟ್ಟ ಪ್ರದೇಶದ ಜನರ ಜೀವನೋಪಾಯಕ್ಕೆ ಧಕ್ಕೆಯಾಗುತ್ತದೆ. ಕಸ್ತೂರಿರಂಗನ್‌ ವರದಿಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮತ್ತು ಈ ಭಾಗದ ಜನರ ಒಕ್ಕೊರಲಿನ ವಿರೋಧವಿದೆ’ ಎಂದು ಬೊಮ್ಮಾಯಿ ಕೇಂದ್ರ ಸಚಿವರಿಗೆ ತಿಳಿಸಿದರು.

ಬಾಧಿತರಾಗಬಹುದಾದ ಜನರು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಎಲ್ಲರ ಜತೆ ಸರ್ಕಾರ ಸಮಾಲೋಚನೆ ನಡೆಸಿದೆ. ಆ ಬಳಿಕ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸುವ ನಿರ್ಣಯವನ್ನು ಸಂಪುಟ ಕೈಗೊಂಡಿದೆ. ಕೇಂದ್ರ ಸರ್ಕಾರವೂ ವರದಿಯನ್ನು ತಿರಸ್ಕರಿಸಲು ತೀರ್ಮಾನಿಸಬೇಕು ಎಂದು ಒತ್ತಾಯಿಸಿದರು.

ಅರಣ್ಯ ಸಂರಕ್ಷಣಾ ಕಾಯ್ದೆ ಸೇರಿದಂತೆ ಹಲವು ಕಾನೂನುಗಳು ಈಗಾಗಲೇ ಜಾರಿಯಲ್ಲಿವೆ. ಅವುಗಳನ್ನು ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದು, ದೇಶದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶವಿರುವ ರಾಜ್ಯಗಳಲ್ಲಿ ಒಂದಾಗಿದೆ. ಈಗ ಮತ್ತೊಂದು ಕಾನೂನನ್ನು ಈ ಭಾಗದ ಜನರ ಮೇಲೆ ಹೇರುವ ಮೂಲಕ ಅವರ ಜೀವನಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.

ರಾಜ್ಯದ ಪಶ್ಚಿಮಘಟ್ಟ ಪ್ರದೇಶದ ಪ್ರತಿ ಎಕರೆ ಜಮೀನನ್ನೂ ಪ್ರತ್ಯೇಕವಾಗಿ ಸಮೀಕ್ಷೆ ನಡೆಸಬೇಕು. ಜನರು ಅಳವಡಿಸಿಕೊಂಡಿರುವ ಪರಿಸರ ಸ್ನೇಹಿ ಜೀವನ ಶೈಲಿಯನ್ನು ಗಣನೆಗೆ ತೆಗೆದುಕೊಳ್ಳಬೇಕು. ವಾಸ್ತವಿಕ ಸಂಗತಿಗಳ ಆಧಾರದಲ್ಲೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಿರ್ಣಯಕ್ಕೂ ಮುನ್ನ ಭೇಟಿ: ಕಸ್ತೂರಿರಂಗನ್‌ ವರದಿಗೆ ಸಂಬಂಧಿಸಿ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿ, ಚರ್ಚಿಸಲಾಗುವುದು. ಆ ಬಳಿಕವೇ ತೀರ್ಮಾನಿಸಲಾಗುವುದು ಎಂಬ ಕೇಂದ್ರ ಸಚಿವರು ಭರವಸೆ ನೀಡಿದರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT