ಬೆಂಗಳೂರು: ಕೋವಿಡ್ ಎರಡನೇ ಅಲೆಯ ಸ್ಫೋಟದ ಬೆನ್ನಲ್ಲೇ ರಾಜ್ಯದಾದ್ಯಂತ ರೆಮ್ಡಿಸಿವಿರ್ ಚುಚ್ಚುಮದ್ದಿಗೆ ಹಾಹಾಕಾರ ಆರಂಭವಾಗಿದೆ. ರಾಜ್ಯದಲ್ಲಷ್ಟೇ ಅಲ್ಲ. ದೇಶದಾದ್ಯಂತ ರೆಮ್ಡಿಸಿವಿರ್ ಚುಚ್ಚುಮದ್ದಿಗೆ ಬೇಡಿಕೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆಔಷಧಿ ಕಂಪನಿ, ಸರ್ಕಾರ ಮತ್ತು ವಿಪಕ್ಷಗಳ ನಡುವೆ ದೊಡ್ಡ ವಾಗ್ಯುದ್ಧವೇ ನಡೆದುಹೋಗಿದೆ. ಹಾಗಾದರೆ, ಈ ಚುಚ್ಚುಮದ್ದಿನ ಮಹತ್ವ ಏನು? ಎಂಬುದನ್ನು ತಿಳಿಯುವುದಾದರೆ.
ವೈರಾಣು ಸೋಂಕು ನಿಯಂತ್ರಣಕ್ಕೆ ಸಹಕಾರಿ
‘ರೆಮ್ಡಿಸಿವಿರ್ ಔಷಧಿಯನ್ನು ವೈರಾಣು ಸೋಂಕು ನಿಯಂತ್ರಣಕ್ಕೆ ಬಳಸಲಾಗುತ್ತದೆ. ಹಿಂದೆ ಹೆಪಟೈಟಸ್–ಸಿ, ಎಬೋಲಾ ವೈರಸ್ ಸೋಂಕು, ಮಿಡ್ಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್ನಂತಹ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತಿತ್ತು. ಈಗ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಳಕೆ ಆಗುತ್ತಿದೆ’ ಎನ್ನುತ್ತಾರೆ ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಬಾಲಚಂದ್ರ ಜಿ.
‘ವೈರಾಣು ನಿಯಂತ್ರಿಸುವ ಅಂಶ ಈ ಔಷಧಿಯಲ್ಲಿದೆ. ಶ್ವಾಸಕೋಶದ ಉರಿಯೂತ ತಡೆಯುವುದು, ಶ್ವಾಸಕೋಶಕ್ಕೆ ಆಗುವ ಹಾನಿ ತಪ್ಪಿಸಲು ಇದು ಸಹಕಾರಿ ಎಂಬುದು ಬಳಕೆಯಿಂದ ಸಾಬೀತಾಗಿದೆ. ಈ ಕಾರಣದಿಂದ ಕೋವಿಡ್ ಚಿಕಿತ್ಸೆಯಲ್ಲಿ ರೆಮ್ಡಿಸಿವಿರ್ ಲಸಿಕೆಗೆ ಬೇಡಿಕೆ ಹೆಚ್ಚಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.