ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾಂತ್ಯದೊಳಗೆ ರಾಜ್ಯ ಪಠ್ಯಕ್ರಮ ಚೌಕಟ್ಟು ಬಿಡುಗಡೆ: ಬಿ.ಸಿ. ನಾಗೇಶ್‌

Last Updated 15 ನವೆಂಬರ್ 2022, 10:28 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್‌ಇಪಿ) ಪೂರಕವಾಗಿ ರಾಜ್ಯ ಪಠ್ಯಕ್ರಮ ಚೌಕಟ್ಟನ್ನು (ಎಸ್‌ಸಿಎಫ್‌) ಈ ತಿಂಗಳ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು ಈಗಾಗಲೇ ಬಿಡುಗಡೆ ಮಾಡಿದೆ. ಅದೇ ಮಾದರಿಯಲ್ಲಿ ರಾಜ್ಯ ಪಠ್ಯಕ್ರಮ ಚೌಕಟ್ಟು ರೂಪಿಸಲು ತಜ್ಞರ ಸಮಿತಿ ನೇಮಿಸಲಾಗುವುದು. ಸಮಿತಿಯ ವರದಿ ಆಧರಿಸಿ ಎಸ್‌ಸಿಎಫ್‌ ಅಂತಿಮಗೊಳಿಸಿ, ಬಿಡುಗಡೆ ಮಾಡುತ್ತೇವೆ’ ಎಂದರು.

ಎನ್‌ಇಪಿ ಅನುಷ್ಠಾನಕ್ಕಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ಐಎಎಸ್‌ ಅಧಿಕಾರಿ ಎಂ.ಟಿ. ರೇಜು ಅವರನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ. ಡಿಸೆಂಬರ್‌ 25ರೊಳಗೆ ನೂತನ ಪಠ್ಯಕ್ರಮ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಸಾರ ಬೋಧನಾ ಕ್ರಮದಲ್ಲಿ ಬದಲಾವಣೆ ತರುವ ಪ್ರಕ್ರಿಯೆ ಆರಂಭವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿಗೆ ಚಾಲನೆ ನೀಡಲಾಗಿದೆ ಎಂದರು.

ಮೂಲಸೌಕರ್ಯಕ್ಕೆ ಒತ್ತು: ಶಿಕ್ಷಣ ಕ್ಷೇತ್ರದಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಮೂರು ವರ್ಷಗಳಲ್ಲಿ 8,000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 8,000 ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ನಾಗೇಶ್‌ ತಿಳಿಸಿದರು.

15,000 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಸಲಾಗಿದೆ. 11,000ದಿಂದ 12,000 ಅರ್ಹ ಅಭ್ಯರ್ಥಿಗಳು ದೊರಕುವ ನಿರೀಕ್ಷೆ ಇದೆ. ಶೀಘ್ರದಲ್ಲಿಯೇ 1:1 ಅನುಪಾತದ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಿಗೆ ಸೇರಿದ ಜಮೀನುಗಳ ದಾಖಲೆಗಳಲ್ಲಿನ ದೋಷಗಳು ಹಾಗೂ ಶಾಲಾ ಆಸ್ತಿಗಳ ಒತ್ತುವರಿ ತೆರವಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಅಂತಹ 18,000 ಪ್ರಕರಣಗಳಿದ್ದವು. ಈವರೆಗೆ 3,000 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ವಸತಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಈ ಕಾರಣಕ್ಕಾಗಿ ಅಂತಹ ವಸತಿ ಶಾಲೆಗಳಲ್ಲಿನ ಶಿಕ್ಷಕರ ನೇಮಕಾತಿ, ಪಠ್ಯಕ್ರಮ, ಬೋಧನಾ ಕ್ರಮ ಸೇರಿದಂತೆ ಶೈಕ್ಷಣಿಕ ವಿಚಾರಗಳ ನಿರ್ವಹಣೆಯನ್ನು ಶಿಕ್ಷಣ ಇಲಾಖೆಗೆ ವಹಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆಯಲಾಗಿದೆ ಎಂದರು.

ನಿರ್ಣಯಕ್ಕೆ ಬಂದಿಲ್ಲ: ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್‌ ವಿತರಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯು ಈವರೆಗೆ ಯಾವುದೇ ನಿರ್ಣಯವನ್ನೂ ಕೈಗೊಂಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT