ಬೆಂಗಳೂರು: ‘ಬರ ಪರಿಹಾರ, ಜಿಎಸ್ಟಿ ರಾಜ್ಯದ ಪಾಲು, ತೆರಿಗೆ ಹಂಚಿಕೆ, ಕೋವಿಡ್ ನಿಯಂತ್ರಣಕ್ಕೆ ನೆರವು ಹೀಗೆ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿದೆ. ನೂತನ ಮುಖ್ಯಮಂತ್ರಿಯಾಗಿರುವ ನೀವು ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಬಂಧಿಸಿದ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು’ ಎಂದು ಬಸವರಾಜ ಬೊಮ್ಮಾಯಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.