ಗದಗ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲೆಯಲ್ಲಿ ಬುಧವಾರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಮುಷ್ಕರ ಶಾಂತಿಯುತವಾಗಿ ನಡೆಯಿತು.
ಮೆರವಣಿಗೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡು, ನಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ದಾವಣಗೆರೆ ಕ್ಲಾಕ್ ಟವರ್ ಬಳಿ ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ಬೆಳಗಾವಿ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಮುಷ್ಜರಕ್ಕೆ ಬೆಂಬಲ ಸೂಚಿಸಿ ಎಂಟು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಹಾಗೂ ಕಾರ್ಮಿಕರು ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಸಂಭಾಜಿ ವೃತ್ತದಲ್ಲಿ ಸೇರಿದ ಅವರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಎಐಟಿಸಿಯುಸಿ, ಸಿಐಟಿಯು, ಪಂಚಾಯತ್ ನೌಕರರ ಸಂಘ, ಅಂಗನವಾಡಿ ಸಂಘ, ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್ ಕೆಎಸ್ ಆರ್ ಟಿಸಿ, ಅಕ್ಷರ ದಾಸೋಹ ನೌಕರರ ಸಂಘ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆ ವೇಳೆ ಕೆಲ ಹೊತ್ತು ನಗರದಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿ ಉಂಟಾಯಿತು.
ಕಲಬುರ್ಗಿ: ಕಾರ್ಮಿಕರ ಮೆರವಣಿಗೆಯು ಜಗತ್ ಸರ್ಕಲ್ ತಲುಪಿದ್ದು, ಸರ್ಕಲ್ ನಿಂದ ಹೊರಡುವ ಎಲ್ಲ ರಸ್ತೆಗಳು ಬಂದ್ ಆಗಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ.
ಕಲಬುರ್ಗಿ: ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ನಗರದ ಗಂಜ್ ನಿಂದ ಜಗತ್ ವೃತ್ತದವರೆಗೆ ಮೆರವಣಿಗೆ ನಡೆಸುತ್ತಿದ್ದಾರೆ.
ಮಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ಬುಧವಾರ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ.
ಎಡಪಕ್ಷಗಳ ಮುಖಂಡರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿದೆ. ಪ್ರಸ್ತುತ ಪರಿಸ್ಥಿತಿ ಸರಿಯಿಲ್ಲದ ಹಿನ್ನಲೆಯಲ್ಲಿ ಬಂದ್ಗೆ ಕರೆ ನೀಡುವುದಿಲ್ಲ ಎಂದು ತಿಳಿಸಿದ್ದರು.
ಕಾಸರಗೋಡಿನಲ್ಲಿ ಬಂದ್ನ ಪರಿಣಾಮ ಉಂಟಾಗಿದ್ದು ಶಾಲಾ ಕಾಲೇಜುಗಳು, ಹೊಟೇಲ್ಗಳು, ಪೆಟ್ರೋಲ್ ಬಂಕ್ಗಳು ಇತರೆ ಅಂಗಡಿ ಮುಗ್ಗಟ್ಟುಗಳು ತೆರೆದಿಲ್ಲ. ಬಸ್ ಸಂಚಾರದಲ್ಲೂ ವ್ಯತ್ಯಯ ಕಂಡುಬಂದಿದೆ. ಕೇರಳಕ್ಕೆ ಬಸ್ ಸಂಚಾರ ನಿಲ್ಲಿಸಲಾಗಿದ್ದು, ಕೇರಳ ಸಾರಿಗೆ ಸಂಸ್ಥೆ ಬಸ್ ಗಳು ಮಂಗಳೂರು ಬಸ್ ನಿಲ್ದಾಣದಲ್ಲಿಯೇ ನಿಲುಗಡೆಯಾಗಿವೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಬಂದ್ನಿಂದಾಗಿ ಯಾವುದೇ ವ್ಯತ್ಯಯವಾಗಿಲ್ಲ. ಶಾಲಾ ಕಾಲೇಜುಗಳು, ಇತರೆ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದೆ. ಖಾಸಗಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಎಂದಿನಂತೆಯೆ ಸಂಚರಿಸುತ್ತಿವೆ. ಅಟೋ ರಿಕ್ಷಾಗಳು, ಟ್ಯಾಕ್ಸಿಗಳು ಓಡಾಡುತ್ತಿವೆ.
ವಿವಿಧ ಕಾರ್ಮಿಕ ಸಂಘಟನೆಗಳು ನಗರದ ಪುರಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದವು.
ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.
ವಿಜಯಪುರ: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರಕ್ಕೆ ಇಲ್ಲಿನ ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಆಟೋ ಚಾಲಕರು ಸೇರಿದಂತೆ ಖಾಸಗಿ ಬಸ್ ಮಾಲೀಕರ ಸಂಘ ಸೇರಿದಂತೆ ಯಾವುದೇ ಸಂಘಟನೆಗಳು ಬೆಂಬಲ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ ಜನಜೀವನ ಎಂದಿನಂತೆ ಇತ್ತು.
ಅಂಗಡಿ ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ, ಸಿನಿಮಾ ಮಂದಿರಗಳು, ರೇಷ್ಮೆಗೂಡಿನ ಮಾರುಕಟ್ಟೆ ಎಂದಿನಂತೆ ಕಾರ್ಯನಿರ್ವಹಿಸಿದವು. ಶಾಲಾ ಕಾಲೇಜುಗಳು, ಬ್ಯಾಂಕುಗಳು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಕೊರತೆ ಕಂಡು ಬರಲಿಲ್ಲ.
ರಾಯಚೂರು: ಸಿಂಧನೂರು ನಗರವೊಂದನ್ನು ಹೊರತುಪಡಿಸಿ ಜಿಲ್ಲೆಯಾದ್ಯಂತ ಅಖಿಲ ಭಾರತ ಮುಷ್ಕರ ಹೋರಾಟಕ್ಕೆ ಸಿಮೀತವಾಗಿದೆ.
ಸಿಂಧನೂರಿನಲ್ಲಿ ಬಹುತೇಕ ಮಳಿಗೆಗಳು ಸ್ವಯಂಪ್ರೇರಿತರಾಗಿ ಬಂದ್ ಮಾಡಿಕೊಂಡಿದ್ದಾರೆ. ಇನ್ನುಳಿದಂತೆ ಜನಜೀವನ ಎಂದಿನಂತೆ ಆರಂಭವಾಗಿದೆ.
ರಾಯಚೂರು ನಗರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರಗತಿಪರ ಸಂಘಟನೆಗಳು ಧರಣಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನಿರ್ಣಯಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಎಲ್ಲ ಕಡೆಗಳಲ್ಲೂ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ. ಮೆರವಣಿಗೆ ನಡೆಸಲು ಅವಕಾಶ ನೀಡಿಲ್ಲ.