ನವದೆಹಲಿ(ಪಿಟಿಐ): ರಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸಿದ ಪಿ.ವಿ. ಸಿಂಧು, ಕಂಚಿನ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್, ಜಿಮ್ನಾಸ್ಟಿಕ್ಸ್ ಪಟು ದೀಪಾ ಕರ್ಮಾಕರ್ ಮತ್ತು ಶೂಟರ್ ಜಿತು ರಾಯ್ ಅವರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸೋಮವಾರ ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ರಿಯೊ ಒಲಿಂಪಿಕ್ಸ್ನಲ್ಲಿ ಸಾಧನೆ ತೋರಿದ ಮೂವರು ಮಹಿಳೆಯರು ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ನೀಡಿರುವುದು ರಾಷ್ಟ್ರೀಯ ಕ್ರೀಡಾ ಪುರಸ್ಕಾರದ ಇತಿಹಾಸದಲ್ಲಿ ಇದೇ ಮೊದಲು.
ಒಲಿಂಪಿಕ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಸಿಂಗಲ್ಸ್ನಲ್ಲಿ ಹೈದರಾಬಾದಿನ ಸಿಂಧು ಬೆಳ್ಳಿ ಗೆದ್ದಿದ್ದರು. ವನಿತೆಯರ 58 ಕೆಜಿ ಕುಸ್ತಿ ವಿಭಾಗದಲ್ಲಿ ಹರಿಯಾಣದ ಸಾಕ್ಷಿ ಮಲಿಕ್ ಕಂಚಿನ ಪದಕ ಗೆದ್ದಿದ್ದರು. ಒಲಿಂಪಿಕ್ಸ್ ವನಿತೆಯರ ಜಿಮ್ನಾಸ್ಟಿಕ್ಸ್ ನಲ್ಲಿ ಸ್ಪರ್ಧಿಸಿದ ಪ್ರಥಮ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು ಫೈನಲ್ ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು.
ಜೀತು ರಾಯ್ ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಒಂದು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಜಯಿಸಿದ್ದರು. ರಿಯೊ ಒಲಿಂಪಿಕ್ಸ್ ನಲ್ಲಿಯೂ ಅವರು ಸ್ಪರ್ಧಿಸಿದ್ದರು.
ಪದಕ, ಪ್ರಮಾನಪತ್ರ ಹಾಗೂ ₹ 7.5 ಲಕ್ಷ ನಗದು ಬಹುಮಾನವನ್ನು ಒಳಗೊಂಡ ಖೇಲ್ ರತ್ನ ಪ್ರಶಸ್ತಿಯನ್ನು ಪ್ರಣವ್ ಮುಖರ್ಜಿ ಅವರಿಂದ ಕ್ರೀಡಾಪಟುಗಳು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಅರ್ಜುನ ಪ್ರಶಸ್ತಿ ಪ್ರದಾನ ಮಾಲಾಯಿತು. ಅರ್ಜುನ್ ಪ್ರಶಸ್ತಿಯು ಪ್ರಮಾಣಪತ್ರ ಹಾಗೂ ₹ 5 ಲಕ್ಷ ನಗದು ಬಹುಮಾನ ಒಳಗೊಂಡಿದೆ.